ಚನ್ನಪಟ್ಟಣ: ತಾಲ್ಲೂಕಿನ ಅಪ್ಪಗೆರೆ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪದ ಮೇಲೆ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ.
ತಾಲ್ಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದ ನವೀನ (35), ಪಟ್ಟಣದ ವಿನೋದ್ (20), ಯುವರಾಜ್ (32) ಬಂಧಿತರು. ಆರೋಪಿಗಳಿಂದ 113 ಗ್ರಾಂ ಚಿನ್ನಾಭರಣ, ₹ 11 ಸಾವಿರ ನಗದು ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಏ. 19 ರಂದು ಅಪ್ಪಗೆರೆ ಗ್ರಾಮದ ಶಾಂತಮ್ಮ ಎಂಬುವರ ಮನೆಯಲ್ಲಿ ಚಿನ್ನಾಭರಣ ದೋಚಿದ್ದರು. ಶಾಂತಮ್ಮ ಒಬ್ಬರೇ ಮನೆಯಲ್ಲಿ ಇದ್ದ ವೇಳೆ ಮನೆಯೊಳಗೆ ಪ್ರವೇಶಿಸಿದ್ದ ಆರೋಪಿಗಳು ಆಕೆಯ ಬಾಯಿಗೆ ಬಟ್ಟೆ ತುರುಕಿ, ಕಟ್ಟಿ ಹಾಕಿ ಕಳ್ಳತನ ಮಾಡಿ ಪರಾರಿ ಆಗಿದ್ದರು.
ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಶಾಂತಮ್ಮ ಅವರಿಗೆ ಆರೋಪಿಗಳಲ್ಲಿ ಒಬ್ಬನಾದ ನವೀನ ಸಂಬಂಧಿ ಎಂದು ಹೇಳಲಾಗಿದೆ. ಅಗತ್ಯ ಮಾಹಿತಿ ಕಲೆ ಹಾಕಿದ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.