ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ತಿಂಗಳ ವೇತನ ಬಾಕಿ ಪಾವತಿಗೆ ಒತ್ತಾಯ

ಆಶಾ ಕಾರ್ಯಕರ್ತೆಯರ ಸೇವೆ ಬಂದ್‌; ಡಿಎಚ್‌ಒ ಕಚೇರಿ ಎದುರು ಪ್ರತಿಭಟನೆ
Last Updated 7 ಜನವರಿ 2020, 12:48 IST
ಅಕ್ಷರ ಗಾತ್ರ

ರಾಮನಗರ: ಆಶಾ ಕಾರ್ಯಕರ್ತೆಯರ 15 ತಿಂಗಳ ವೇತನ ಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಆಲ್ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌ (ಎಐಯುಟಿಯುಸಿ) ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಆಶಾ ಕಾರ್ಯಕರ್ತೆಯರಿಗೆ ಕಳೆದ 15 ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ‘ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಶನ್‌’ನ ಎಂಸಿಟಿಎಸ್ (ಮದರ್ ಅಂಡ್ ಚೈಲ್ಡ್ ಟ್ರ್ಯಾಕಿಂಗ್ ಸಿಸ್ಟಂ) ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಜೊತೆಗೆ 15 ತಿಂಗಳಿಂದ ಎಂಸಿಟಿಎಸ್ ಪ್ರೋತ್ಸಾಹಧನ ಪಾವತಿಯಾಗಿಲ್ಲ. ಆರೋಗ್ಯ ಇಲಾಖೆ ಕೂಡ ಪ್ರೋತ್ಸಾಹಧನ ಪಾವತಿಸುವ ಖಾತ್ರಿ ಇಲ್ಲ. ಹೀಗಾಗಿ ಬಾಕಿ ಪಾವತಿ ಆಗುವವರೆಗೂ ಆಶಾ ಕಾರ್ಯಕರ್ತೆಯರು ತಮ್ಮ ಸೇವೆಯನ್ನು ಸ್ಥಗಿತಗೊಳಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಆಲ್ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌ ನ ರಾಜ್ಯ ಘಟಕದ ಉಪಾಧ್ಯಕ್ಷೆ ಟಿ.ಸಿ. ರಮಾ ತಿಳಿಸಿದರು.

ಆಶಾ ಕಾರ್ಯಕರ್ತೆಯು ಪ್ರತಿ ತಿಂಗಳು ಎಂಸಿಟಿಎಸ್ ಸೇವೆಗಳನ್ನು ಮಾಡಿದಷ್ಟು ಹಣ ಸಂಪೂರ್ಣವಾಗಿ ನೀಡಬೇಕು. ಇದಕ್ಕಾಗಿ ಮ್ಯಾನುವಲ್‌ ವರದಿ ಸಂಗ್ರಹಿಸಿ ವೇತನ ಪಾವತಿ ಮಾಡಬೇಕು ಅಥವಾ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಆಶಾಗೆ ₨3 ಸಾವಿರ ನೀಡಬೇಕು. ಜನಸಂಖ್ಯೆಗೆ ಅನುಗುಣವಾಗಿ ವೇತನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರ ಗೌರವಧನವನ್ನು ತಿಂಗಳಿಗೆ ಕನಿಷ್ಠ ₨12 ಸಾವಿರ ನಿಗದಿ ಮಾಡಬೇಕು. ಆಶಾ ಸಾಫ್ಟ್‌ ಅಥವಾ ಆರ್‌ಸಿಪಿಎಚ್ ಪೋರ್ಟ್‌ಲ್‌ಗೆ ಆಶಾ ಪೋತ್ಸಾಹಧನದ ಜೋಡಣೆ ರದ್ದುಪಡಿಸಬೇಕು. ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ಅದರ ಮೂಲಕ ಅಪಘಾತಕ್ಕೆ ಒಳಗಾಗುವ, ಮರಣ ಹೊಂದುವ ಕಾರ್ಯಕರ್ತೆಯರ ಕುಟುಂಬಕ್ಕೆ ಪರಿಹಾರ ಕಲ್ಪಿಸುವ ಕೆಲಸವಾಗಬೇಕು. ಈಗಾಗಲೇ ನೀಡಿರುವ ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ ದ್ವಿಚಕ್ರ ವಾಹನ ಖರೀದಿಸಲು ಸಹಾಯಧನ ನೀಡಬೇಕು. ಹಿಂದಿನಂತೆ ಪ್ರತಿ ವರ್ಷ ನಾಲ್ಕು ಸೀರೆಗಳನ್ನು ನೀಡಬೇಕು. 10 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದವರಿಗೆ ಸಹಾಯಧನ ನೀಡುವ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಪಿಂಚಣಿ, ನಿವೃತ್ತಿ ಪರಿಹಾರ, ವಿಮೆ, ಹೆರಿಗೆ ರಜೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.

ಮನವಿ ಸ್ವೀಕರಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲಾಗುವುದು, ಕೆಲಸಕ್ಕೆ ಹಾಜರಾಗಿ ಎಂದು ಮನವಿ ಮಾಡಿದರು. '15 ತಿಂಗಳಿಂದ ಉಳಿಸಿಕೊಂಡಿರುವ ಎಂಸಿಟಿಎಸ್ ಪ್ರೋತ್ಸಾಹಧನ ಪಾವತಿಯಾದರೆ ಮಾತ್ರ ಕೆಲಸಕ್ಕೆ ಹಾಜರಾಗುತ್ತೇವೆ, ಅಲ್ಲಿಯವರೆವಿಗೂ ಕೆಲಸ ಸ್ಥಗಿತಗೊಳಿಸುತ್ತೇವೆ' ಎಂದು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರು ಒಕ್ಕೊರಲಿನಿಂದ ಹೇಳಿದರು.

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಗಳಾದ ರೂಪಾ, ಗೀತಾ, ಶಿವಲಿಂಗಮ್ಮ, ಸರೋಜ, ವಸಂತ, ಪ್ರೇಮಾ, ಭಾಗ್ಯ, ಆಶಾ, ಎಸ್. ಪವಿತ್ರ, ಎಐಯುಟಿಯುಸಿ ಸಂಘಟನೆಯ ಶ್ರೀಕಾಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT