ಬಿಡದಿಯಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ಬಿಟ್ಕಾಯಿನ್ ಹಗರಣದ ಬಗ್ಗೆ ನನ್ನಲ್ಲಿ ಯಾವುದೇ ದಾಖಲೆಗಳಿಲ್ಲ ಎಂದು ಈಗಾಗಲೇ ಕಾಂಗ್ರೆಸ್ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸಹ ನನ್ನಲ್ಲಿ ದಾಖಲೆ ಇದೆ ಎಂದು ಹೇಳಿದ್ದರು. ಆದರೆ ಬಿಡುಗಡೆ ಮಾಡಲಿಲ್ಲ. ಕಾಂಗ್ರೆಸ್ನವರು ತಮ್ಮ ಬ್ಯಾಗಿನಲ್ಲಿ ಹಾವಿದೆ ಎಂದು ನಮ್ಮನ್ನು ಸುಮ್ಮನೆ ಹೆದರಿಸುವುದು ಸರಿಯಲ್ಲ. ರಾಜಕಾರಣಕ್ಕಾಗಿ ರಾಜಕಾರಣ ಮಾಡುವುದನ್ನು ಬಿಡಬೇಕು. ಈ ವಿಚಾರದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಸೂಕ್ತ ದಾಖಲೆ ಒದಗಿಸಿದರೆ, ತಪ್ಪಿತಸ್ಥರು ಸ್ವಪಕ್ಷೀಯರೇ ಆಗಿದ್ದರೂ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುತ್ತಾರೆ’ ಎಂದು ಹೇಳಿದರು.