ರಾಮನಗರ: ತಾಲ್ಲೂಕಿನ ಕೇತಗಾನಹಳ್ಳಿಯಲ್ಲಿರುವ ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಮನೆಗೆ ಬಿಜೆಪಿ ಮುಖಂಡ ಡಾ. ಕೆ. ಸುಧಾಕರ್ ಸೋಮವಾರ ಭೇಟಿ ನೀಡಿ ಮಾತುಕತೆ ನಡೆಸಿದರು.
ಬೆಳಿಗ್ಗೆ ಮನೆಗೆ ಬಂದ ಸುಧಾಕರ್ ಅವರು, ಕುಮಾರಸ್ವಾಮಿ ಅವರಿಗೆ ಹೂಗುಚ್ಛ ನೀಡಿ ಸಂಕ್ರಾಂತಿ ಶುಭಾಶಯ ಕೋರಿದರು. ಬಳಿಕ ಇಬ್ಬರು ಕೆಲ ಹೊತ್ತು ಮಾತುಕತೆ ನಡೆಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸುಧಾಕರ್ ಸ್ಪರ್ಧೆ ಕುರಿತು ಮಾತುಕತೆಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಅವರು, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕ್ಷೇತ್ರದ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ–ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದ್ದರೂ, ಉಭಯಪಕ್ಷಗಳ ನಡುವೆ ಇದುವರೆಗೆ ಸೀಟುಗಳ ಹಂಚಿಕೆಯಾಗಿಲ್ಲ. ಆದರೂ, ಕೆಲ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಕೆಲವರ ಹೆಸರುಗಳು ಕೇಳಿ ಬರುತ್ತಿವೆ.