ಕನಕಪುರ: ‘ಕೋವಿಡ್ ನಿಯಂತ್ರಣಕ್ಕಾಗಿ ಮುಂಚೂಣಿ ಸಿಬ್ಬಂದಿಗೆ ಮೊದಲ ಆದ್ಯತೆಯಾಗಿ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದೆ. ನಗರಸಭೆ ಸಿಬ್ಬಂದಿ ಮತ್ತು ಪೌರ ಕಾರ್ಮಿಕರಿಗೂ ಲಸಿಕೆ ನೀಡಲಾಗುತ್ತಿದೆ’ ಎಂದು ಅಧ್ಯಕ್ಷ ಮೀಸೆ ವೆಂಕಟೇಶ್ ತಿಳಿಸಿದರು.
ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಬೂಸ್ಟರ್ ಡೋಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್ ಸೋಂಕು ವಿಶ್ವದಾದ್ಯಂತ ಆವರಿಸಿಕೊಂಡಿದೆ. ಅದರ ನಿಯಂತ್ರಣಕ್ಕೆ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೂ ಮೂರನೇ ಅಲೆ ಹೆಚ್ಚುತ್ತಿದೆ. ಎಲ್ಲರೂ ಸರ್ಕಾರದ ಮಾರ್ಗಸೂಚಿ ಪಾಲಿಸಿ ಸೋಂಕು ತಡೆಗೆ ಮುಂದಾಗಬೇಕು ಎಂದರು.
ಸೋಂಕು ಹೆಚ್ಚು ಬಾಧಿಸದಂತೆ ತಡೆಗಟ್ಟಲು ಮನುಷ್ಯರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕಾಗಿ ಎರಡು ಹಂತದ ಕೋವಿಡ್ ಲಸಿಕೆ ನೀಡಲಾಗಿದೆ. ಎರಡು ಲಸಿಕೆ ಪಡೆದವರಿಗೆ ಬೂಸ್ಟರ್ ಡೋಸ್ ಕೊಡಲಾಗುತ್ತಿದೆ ಎಂದು ಹೇಳಿದರು.
ನಗರಸಭೆ ಪೌರಾಯುಕ್ತೆ ಬಿ. ಶುಭಾ ಮಾತನಾಡಿ, ಸರ್ಕಾರ ಸಾರ್ವಜನಿಕವಾಗಿ ಎರಡು ಲಸಿಕೆ ಪಡೆದಿರುವ ಎಲ್ಲಾ ನಾಗರಿಕರಿಗೂ ಬೂಸ್ಟರ್ ಡೋಸ್ ನೀಡಲಿದೆ. ಅದಕ್ಕೂ ಮೊದಲು ಕೊರೊನಾ ವಾರಿಯರ್ಸ್ಗಳಾಗಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿರುವವರಿಗೆ ನೀಡಲಾಗುತ್ತಿದೆ ಎಂದರು.
ನಗರಸಭೆಯಲ್ಲಿ ಅಧಿಕಾರಿಗಳು ಸೇರಿದಂತೆ 200ಕ್ಕೂ ಹೆಚ್ಚು ಸಿಬ್ಬಂದಿ ಇದ್ದು, ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕವಾಗಿ ಎಲ್ಲರೂ ನಮ್ಮೊಂದಿಗೆ ಕೈ ಜೋಡಿಸಿ ರೋಗ ತಡೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ನಗರಸಭೆ ಅಧಿಕಾರಿಗಳಾದ ಡಿ.ವಿ. ಪಾರ್ವತಿ, ಜಿ. ಕುಸುಮಾ, ವೆಂಕಟೇಶ್, ಸದಸ್ಯರಾದ ಸ್ಟುಡಿಯೊ ಚಂದ್ರು, ನಾಗರಾಜು, ರಾಮದಾಸ್, ಶೋಭಾ, ಜಹಿದಾಬಾನು, ಸುಲ್ತಾನಬಾನು ಉಪಸ್ಥಿತರಿದ್ದರು.