ಕನಕಪುರ: ಸರ್ಕಾರ ಗೋಹತ್ಯೆ ನಿಷೇಧಿಸಿದೆ. ಗೋವುಗಳ ರಕ್ಷಣೆ ಮಾಡಲು ಮುಂದಾದ ಬಜರಂಗದಳದ ಮಂಜು ಭಾರ್ಗವ್ ಮೇಲೆ ಹಲ್ಲೆ ನಡೆಸಿ ಅವರ ಹತ್ಯೆಗೆ ಯತ್ನಿಸಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬಜರಂಗದಳದ ತಾಲ್ಲೂಕು ಅಧ್ಯಕ್ಷ ಕೆ.ಆರ್. ಸುರೇಶ್ ಒತ್ತಾಯಿಸಿದರು.
ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳ ಮೇಲೆ ತುಮಕೂರಿನಲ್ಲಿ ಅನ್ಯಕೋಮಿನವರು ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲ್ಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ ನಂತರ ಅವರು ಮಾತನಾಡಿ ದರು.
ದೇಶದ ಕಾನೂನನ್ನು ನಾವು ಪಾಲನೆ ಮಾಡುತ್ತಿಲ್ಲ. ಗೋಹತ್ಯೆ ನಿಷೇಧಿಸಿದ ಮೇಲೆ ಗೋವುಗಳ ಹತ್ಯೆ ಕಣ್ಮುಂದೆ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ತಡೆಗಟ್ಟುತ್ತಿಲ್ಲ. ರಕ್ಷಣೆ ಮಾಡಲು ಹೋದ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಕೊಲೆ ಸಂಚು ರೂಪಿಸಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಹಿಂದೂ ಹಾಗೂ ಹಿಂದುತ್ವದ ಪರವಾಗಿ ಹೋರಾಡುವವರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗುತ್ತಿದೆ. ದೇಶದಲ್ಲಿ ನಮಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಕಾನೂನನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು.