ಕನಕಪುರ: ತಾಲ್ಲೂಕಿನ ಸಾತನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕ್ಯಾನ್ಸರ್ ಸಪ್ತಾಹ ದಿನಾಚರಣೆ ಅಂಗವಾಗಿ ಸೋಮವಾರ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ನಡೆಯಿತು.
ಸಾತನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ದಿವ್ಯಶ್ರಿ ಮಾತನಾಡಿ, ‘ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದರಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಸಾರ್ವಜನಿಕರು ಈ ರೋಗದ ಬಗ್ಗೆ ಜಾಗೃತಿ ವಹಿಸುವ ಮೂಲಕ ಕ್ಯಾನ್ಸರ್ ತಡೆಗಟ್ಟಲು ಸಹಕರಿಸಬೇಕು’ ಎಂದು ಹೇಳಿದರು.
ವಿಶ್ವದಲ್ಲಿ ಒಟ್ಟಾರೆ 2 ಕೋಟಿ ಜನರು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಪ್ರತಿ 10 ಮಂದಿಯಲ್ಲಿ ಒಬ್ಬರಿಗೆ ಈ ಕಾಯಿಲೆ ಇದೆ. ಕ್ಯಾನ್ಸರ್ ಗುಣಪಡಿಸಬಹುದಾಗಿದ್ದು, ಇದಕ್ಕೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಪ್ರತಿಯೊಬ್ಬರೂ ಆರೋಗ್ಯಗರ ಜೀವನ ಶೈಲಿ ರೂಢಿಸಿಕೊಳ್ಳುವ ಮೂಲಕ ಕ್ಯಾನ್ಸರ್ನಿಂದ ದೂರ ಇರಬೇಕು ಎಂದು ಹೇಳಿದರು.
ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪುಟ್ಟೇಗೌಡ ಕ್ಯಾನ್ಸರ್ ರೋಗದ ಗುಣಲಕ್ಷಣದ ಬಗ್ಗೆ ಮಾಹಿತಿ ನೀಡಿದರು. ಇದ್ದಕ್ಕಿದ್ದಂತೆ ತೂಕ ಕಡಿಮೆಯಾಗುವುದು, ಸುಸ್ತು, ಕೆಮ್ಮು, ದೀರ್ಘಕಾಲದ ಗಾಯಗಳು, ಕ್ಯಾನ್ಸರ್ ರೋಗದ ಗುಣ ಲಕ್ಷಣಗಳಾಗಿವೆ ಎಂದರು.
ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕ ನಾಗರಾಜು ರೋಗದ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.
ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಚೈತನ್ಯ, ಡಾ. ಅಲೋಕ್ ಕುಮಾರ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಮತ್ತು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.