ಕುದೂರು: ಮಾಗಡಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಪಟ್ಟಣದಲ್ಲಿ ಸೋಮವಾರ ಸಂಜೆ 7 ಗಂಟೆಗೆ ಮೇಣದಬತ್ತಿ ಹಿಡಿದು ಮತದಾನದ ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗ್ರಾಮ ಪಂಚಾಯಿತಿ ಪಿಡಿಒ ಪುರುಷೋತ್ತಮ್, ‘ಪ್ರತಿಯೊಬ್ಬ ಮತದಾರರೂ ತಮ್ಮ ಹಕ್ಕು ಚಲಾಯಿಸುವುದಲ್ಲದೇ, ತಮ್ಮ ನೆರೆ ಹೊರೆಯವರಿಗೂ ಮತ ಚಲಾಯಿಸುವಂತೆ ನೋಡಿಕೊಳ್ಳಬೇಕು’ ಎಂದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೇಣದಬತ್ತಿ ಹಿಡಿದು ಪಂಚಾಯಿತಿ ಸಿಬ್ಬಂದಿ, ಸಂಜೀವಿನಿ ಮಹಿಳಾ ಸಂಘದ ಸದಸ್ಯರು ಸೇರಿದಂತೆ ಸಾರ್ವಜನಿಕರು ಮೆರವಣಿಗೆ ನಡೆಸಿ ಜಾಗೃತಿ ಮೂಡಿಸಿದರು.
ಪಂಚಾಯಿತಿ ಕಾರ್ಯದರ್ಶಿ ವೆಂಕಟೇಶ್ ಮಾತನಾಡಿ, ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಮತದಾರರ ಪಾತ್ರ ಮುಖ್ಯವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ. ಹೀಗಾಗಿ ಪ್ರತಿಯೊಬ್ಬರು ತಪ್ಪದೆ ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕಿದೆ ಎಂದು ತಿಳಿಸಿದರು.
ಪಟ್ಟಣದ ಹಾಲಿನ ಡೈರಿ ಸಮೀಪ ಬಣ್ಣ ಬಣ್ಣದ ರಂಗೋಲಿ ಹಾಕಿ ದೀಪವನ್ನು ಬೆಳಗಿಸಿ ಮೇಣದ ಬತ್ತಿ ಮೆರವಣಿಗೆಯೊಂದಿಗೆ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಜಾಗೃತಿ ಮೂಡಿಸಿದರು. ಮತದಾನ ಜಾಗೃತಿ ಮೂಡಿಸುವ ಹಲವು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು.
ಇದಕ್ಕೂ ಮುನ್ನ ಮಧ್ಯಾಹ್ನ ಪಂಚಾಯಿತಿ ಸದಸ್ಯರು, ಪೌರಕಾರ್ಮಿಕರನ್ನು ಒಳಗೊಂಡಂತೆ ಸಾರ್ವಜನಿಕರು ಬೈಕ್ ರ್ಯಾಲಿ ನಡೆಸಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.
ಪಂಚಾಯಿತಿ ಸಿಬ್ಬಂದಿ, ಪೌರಕಾರ್ಮಿಕರು, ಸಾರ್ವಜನಿಕರು, ಸಂಜೀವಿನಿ ಮಹಿಳಾ ಸಂಘದ ಸದಸ್ಯರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.