ರಾಮನಗರ: ಕೇಂದ್ರೀಯ ತನಿಖಾ ದಳ (ಸಿಬಿಐ)ದ ಅಧಿಕಾರಿಗಳ ತಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸಗಳಲ್ಲಿ ಬುಧವಾರ ಪರಿಶೀಲನೆ ನಡೆಸಿತು.
ಶಿವಕುಮಾರ್ ಅವರ ಕನಕಪುರ, ದೊಡ್ಡಾಲಹಳ್ಳಿ, ಸಂತೆ ಕೋಡಿಹಳ್ಳಿಯಲ್ಲಿನ ಮನೆಗಳಿಗೆ ಭೇಟಿ ನೀಡಿದ ಎಂಟು ಅಧಿಕಾರಿಗಳ ತಂಡ, ಆಸ್ತಿ ಮತ್ತು ಇತರ ದಾಖಲೆಗಳನ್ನು ಪರಿಶೀಲಿಸಿತು.
ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೂ ಪರಿಶೀಲನೆ ನಡೆಸಿದ್ದು, ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದವರು, ಸಂಬಂಧಿಕರ ಹೆಸರಿನಲ್ಲಿ ಇರುವ ಆಸ್ತಿಗಳ ಕುರಿತು ಕನಕಪುರ ತಹಶೀಲ್ದಾರ್ ವಿಶ್ವನಾಥ್ ಅವರಿಂದ ಮಾಹಿತಿ ಪಡೆಯಿತು.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ಅಧಿಕಾರಿಗಳ ತಂಡವು ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಅವರ ಮನೆಗಳಲ್ಲಿ ದಾಖಲೆಗಳನ್ನು ಪರಿಶೀಲಿಸಿತ್ತು.