ಚನ್ನಪಟ್ಟಣ: ‘ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರ ಮೂಲಕ ಸೃಜನಶೀಲತೆಯನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಮನಗರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ. ನಾಗೇಶ್ ಕಿವಿಮಾತು ಹೇಳಿದರು.
ನಗರದ ಜ್ಞಾನಸರೋವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಸಾಂಸ್ಕೃತಿಕ ಘಟಕದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಆಹಾರ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ಆಲಸ್ಯ ಮನೋಭಾವನೆಯನ್ನು ತೊರೆದು ಕ್ರಿಯಾಶೀಲರಾಗಿರಬೇಕು. ವಿದ್ಯಾರ್ಥಿಗಳು ಆಹಾರದ ಮಹತ್ವ ತಿಳಿಯುವುದರ ಜೊತೆಗೆ ಆರೋಗ್ಯಕ್ಕಾಗಿ ಆಹಾರ ಎಂಬುದನ್ನು ಅರಿತುಕೊಳ್ಳಬೇಕು’ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಬಿ.ಎಸ್. ಹೇಮಲತಾ ಮಾತನಾಡಿ, ಪ್ರತಿವರ್ಷವೂ ನಮ್ಮ ಸಂಸ್ಥೆಯು ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಅಗತ್ಯವಾಗಿರುವ ಕೌಶಲಗಳನ್ನು ವೃದ್ಧಿ ಪಡಿಸುವ ಹಲವು ವೈವಿಧ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ ಎಂದು ತಿಳಿಸಿದರು.