ರಾಮನಗರ: ನಗರಸಭೆ ಆವರಣದಲ್ಲಿ ಬುಧವಾರ ಟಿ.ಬಿ. ಸೋಲಿಸಿ-ದೇಶ ಗೆಲ್ಲಿಸಿ ಜನಾಂದೋಲನ ಅಭಿಯಾನದಡಿ ಸಂಚಾರಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಕಚೇರಿ ಹಾಗೂ ನಗರಸಭೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ನಗರಸಭೆ ಪೌರಾಯುಕ್ತ ನಂದಕುಮಾರ್ ಚಾಲನೆ ನೀಡಿದರು.
ಕ್ಷಯರೋಗದ ನಿಯಂತ್ರಣ ಕುರಿತು ಮಾಹಿತಿಯನ್ನು ನಗರಸಭೆಯ ಕಸದ ವಿಲೆವಾರಿ ವಾಹನಗಳಲ್ಲಿ ಜಿಂಗಲ್ಸ್ ಮೂಲಕ ಪ್ರಚಾರ ಮಾಡಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು. ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆ. ಇದರ ರೋಗದ ಲಕ್ಷಣಗಳು ಕಂಡ ತಕ್ಷಣ ಪ್ರಾರಂಭಿಕ ಹಂತದಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಕುಮಾರ್ ಕರಪತ್ರ ಬಿಡುಗಡೆ ಮಾಡಿದರು. ರಾಮನಗರ ಟೌನ್ ವ್ಯಾಪ್ತಿಯಲ್ಲಿ 40 ಪ್ರಕರಣಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗ ಲಕ್ಷಣಗಳು ಕಂಡ ತಕ್ಷಣ ಸಾರ್ವಜನಿಕರು ಕಫ ಪರೀಕ್ಷೆ ಮತ್ತು ಇತರೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಪರೀಕ್ಷೆ ಮತ್ತು ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ನಗರಸಭೆ ಎಂಜಿನಿಯರ್ ಸುಬ್ರಮಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್, ಆರೋಗ್ಯ ನಿರೀಕ್ಷಕರಾದ ವಿಜಯ್ ಕುಮಾರ್, ಪವಿತ್ರಾ, ಗೋಪಿನಾಥ್, ವಿರೂಪಾಕ್ಷ ಹಾಜರಿದ್ದರು.