ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ರಾಹಕರ ಹಕ್ಕು ದಿನಾಚರಣೆ: ಕಾನೂನು ಉಲ್ಲಂಘನೆ ತಡೆಗೆ ಬೇಕು ಅರಿವು

ಗ್ರಾಹಕರ ಹಕ್ಕು ದಿನಾಚರಣೆಯಲ್ಲಿ ಸಿವಿಲ್ ನ್ಯಾಯಾಧೀಶೆ ಅನಿತಾ ಅಭಿಪ್ರಾಯ
Published 6 ಮಾರ್ಚ್ 2024, 7:18 IST
Last Updated 6 ಮಾರ್ಚ್ 2024, 7:18 IST
ಅಕ್ಷರ ಗಾತ್ರ

ರಾಮನಗರ: ‘ಆಧುನಿಕ ಜಗತ್ತಿನಲ್ಲಿ ಕಾನೂನು ಉಲ್ಲಂಘನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದು ಸಮಾಜದ ಮೇಲೆ ವಿವಿಧ ರೀತಿಯ ದುಷ್ಪರಿಣಾಮಗಳನ್ನು ಬೀರುತ್ತಿದೆ. ಅಪರಾಧಗಳನ್ನು ತಡೆಗಟ್ಟಲು ಕಾನೂನಿನ ಅರಿವು ಅಗತ್ಯ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅನಿತಾ ಎನ್.ಪಿ ಹೇಳಿದರು.

ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಹಾಗೂ ಎನ್.ಎಸ್.ಎಸ್ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ನಾಗರಿಕ ಸಮಾಜದಲ್ಲಿ ಬದುಕುವ ಪ್ರತಿಯೊಬ್ಬರಿಗೂ ಆ ನೆಲದ ಕಾನೂನು ಗೊತ್ತಿರಬೇಕು. ಜನರಲ್ಲಿ ಕಾನೂನು ಪ್ರಜ್ಞೆ ಇದ್ದಾಗ ಅಪರಾಧ ಚಟುವಟಿಕೆಗಳು ಕ್ರಮೇಣ ಕಡಿಮೆ ಇರುತ್ತವೆ. ಈ ನಿಟ್ಟಿನಲ್ಲಿ ಜನಲ್ಲಿ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಪ್ರಾಧಿಕಾರವು ಮಾಡುತ್ತಿದೆ’ ಎಂದು ತಿಳಿಸಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎಚ್. ಚನ್ನೇಗೌಡ ಅವರು , ದೇಶದ ಕಾನೂನು ಉಲ್ಲಂಘನೆಯಿಂದ ಆಗಬಹುದಾದ ಪರಿಣಾಮಗಳು ಮತ್ತು ಗ್ರಾಹಕ ಸಂರಕ್ಷಣಾ ಕಾಯ್ದೆ –2019 ನಿಯಮಗಳು ಮತ್ತು ಗ್ರಾಹಕರಿಗೆ ವ್ಯಾಪಾರದಲ್ಲಿ ತೊಂದರೆಯಾದಲ್ಲಿ ಸಂಬಂಧಪಟ್ಟ ಪರಿಹಾರಗಳನ್ನು ಗ್ರಾಹಕ ನ್ಯಾಯಾಲಯದಲ್ಲಿ ಹೇಗೆ ಪಡೆಯಬೇಕೆಂಬುದರ ಕುರಿತು ತಿಳಿಸಿ ಕೊಟ್ಟರು.

ಆಯೋಗದ ಮಹಿಳಾ ಸದಸ್ಯೆ ರೇಣುಕಾದೇವಿ ದೇಶಪಾಂಡೆ ಮಾತನಾಡಿದರು. ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ವತ್ಸಲ ಎಸ್.ವಿ, ಬೋಧಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT