ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸಂಪುಟ ವಿಸ್ತರಣೆ: ಈಗಲಾದರೂ ಸಿಗುತ್ತ ಸಿಪಿವೈಗೆ ಅವಕಾಶ?

ಚನ್ನಪಟ್ಟಣದ ಬಿಜೆಪಿ ನಾಯಕನ ಹೆಸರು ಮತ್ತೆ ಮುನ್ನಲೆಗೆ
Last Updated 11 ಜನವರಿ 2021, 13:14 IST
ಅಕ್ಷರ ಗಾತ್ರ

ರಾಮನಗರ: ಹಳೆ ಮೈಸೂರು ಭಾಗದ ಪ್ರಭಾವಿ ಬಿಜೆಪಿ ಮುಖಂಡರಲ್ಲಿ ಒಬ್ಬರಾದ ಸಿ.ಪಿ. ಯೋಗೇಶ್ವರ್‌ಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗುವ ಸಾಧ್ಯತೆ ಹೆಚ್ಚಾಗಿದೆ.

ಪ್ರಸ್ತುತ ರಾಜ್ಯ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಪ್ರಕ್ರಿಯೆ ನಡೆದಿದ್ದು, ಮುಖ್ಯಮಂತ್ರಿಗಳು ದೆಹಲಿ ಪ್ರವಾಸ ಮುಗಿಸಿ ಬಂದ ಬಳಿಕ ಈ ಬಗೆಗಿನ ನಿರೀಕ್ಷೆಗಳು ಗರಿಗೆದರಿವೆ. ‘ಯೋಗೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ನೀಡುವುದು ನೂರಕ್ಕೆ ನೂರರಷ್ಟು ಗ್ಯಾರಂಟಿ’ ಎಂದು ಹಿಂದೊಮ್ಮೆ ಯಡಿಯೂರಪ್ಪನವರೇ ಹೇಳಿದ್ದಾರೆ. ಮತ್ತೊಂದೆಡೆ, ಕೆಲ ತಿಂಗಳ ಹಿಂದಷ್ಟೇ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆ ಆಗಿರುವ ಯೋಗೇಶ್ವರ್‌ ಅದಕ್ಕೆ ಬಡ್ತಿ ಎಂಬಂತೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಇದ್ದಾರೆ.

ಜೆಡಿಎಸ್‌-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ಯೋಗೇಶ್ವರ್‌ ಪ್ರಮುಖ ಪಾತ್ರ ವಹಿಸಿದ್ದರು. ‘ಸ್ಕೆಚ್‌ ಹಾಕಿ ಕುಮಾರಸ್ವಾಮಿ ಸರ್ಕಾರ ಬೀಳಿಸಿದ್ದು ನಾನೇ’ ಎಂದು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಈ ಕಾರಣಕ್ಕೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕೇ ಸಿಗುತ್ತದೆ ಎಂದು ಹೇಳಲಾಗಿತ್ತು. ಆದರೆ ಮೂರು ಬಾರಿ ಕಡೆಯ ಗಳಿಗೆಯಲ್ಲಿ ಅವರು ಅವಕಾಶಗಳಿಂದ ವಂಚಿತರಾಗಿದ್ದಾರೆ.

ಸದ್ಯ ಜಿಲ್ಲೆಯವರೇ ಆದ ಡಿ.ಕೆ. ಶಿವಕುಮಾರ್‍ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಮತ್ತೊಂದೆಡೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಚನ್ನಪಟ್ಟಣವನ್ನು ಪ್ರತಿನಿಧಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಮನಗರವೂ ಸೇರಿದಂತೆ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿಗೆ ನೆಲೆ ಒದಗಿಸಬಲ್ಲ ಸಮರ್ಥ ನಾಯಕತ್ವದ ಅಗತ್ಯ ಇದೆ. ಸಿಪಿವೈ ಸಹ ಈ ಅವಕಾಶ ಬಳಸಿಕೊಳ್ಳಲು ಯೋಜಿಸಿದ್ದಾರೆ. ಸಚಿವ ಸ್ಥಾನದ ಮೂಲಕ ಆ ಅವಕಾಶ ದಕ್ಕಿಸಿಕೊಳ್ಳುವ ಇರಾದೆ ಅವರದ್ದು.

ಚನ್ನಪಟ್ಟಣದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯೋಗೇಶ್ವರ್‌ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಚ್‌.ಡಿ. ಕುಮಾರಸ್ವಾಮಿ ಅವರ ಎದುರು ಪರಾಭವಗೊಂಡಿದ್ದರು. ನಂತರ ಕೆಲವು ತಿಂಗಳು ರಾಜಕೀಯ ಅಜ್ಞಾತವಾಸ ಅನುಭವಿಸಿದ್ದ ಅವರು ಹುಣಸೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಯತ್ನಿಸಿದ್ದರು. ನಂತರದಲ್ಲಿ ಸಂಪುಟ ವಿಸ್ತರಣೆ ವೇಳೆ ಯೋಗೇಶ್ವರ್ ಅವರಿಗೆ ಮಂತ್ರಿ ಸ್ಥಾನ ಸಿಕ್ಕೇಬಿಟ್ಟಿತು ಎಂದು ಅವರ ಬೆಂಬಲಿಗರು ಚನ್ನಪಟ್ಟಣದಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಅಂತಿಮವಾಗಿ ಮಂತ್ರಿ ಸ್ಥಾನ ಕೈ ತಪ್ಪಿತ್ತು. ಇದರಿಂದ ಬೇಸರಗೊಂಡಿದ್ದ ಯೋಗೇಶ್ವರ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗಿದ್ದರು.

ಸಿಪಿವೈ ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಕಾಂಗ್ರೆಸ್‌ ಬಿಟ್ಟು ಕಮಲ ಪಾಳಯ ಸೇರಿ ಅರಣ್ಯ ಸಚಿವರಾಗಿದ್ದರು. 2013ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಸಿಗದ ಕಾರಣ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಗೆದ್ದು ನಂತರ ಕಾಂಗ್ರೆಸ್‌ ಸರ್ಕಾರ ಬೆಂಬಲಿಸಿದ್ದರು. 2018ರ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಬಿಜೆಪಿಗೆ ಜಿಗಿದಿದ್ದರು. ಹಿಂದೊಮ್ಮೆ ಬಿಜೆಪಿಯಿಂದಲೇ ಸಚಿವರಾಗಿದ್ದು, ಈ ಬಾರಿಯೂ ಅವಕಾಶ ಸಿಕ್ಕಲ್ಲಿ ಅದನ್ನು ಉತ್ತಮವಾಗಿ ನಿಭಾಯಿಸುತ್ತೇನೆ ಎನ್ನುವ ವಿಶ್ವಾಸ ಅವರದ್ದು.

ಗುಟ್ಟಾಗಿ ಸಿದ್ಧತೆ: ಕಳೆದ ಬಾರಿ ಸಂಪುಟ ವಿಸ್ತರಣೆ ಸಂದರ್ಭ ಸಿಪಿವೈಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಸಾಕಷ್ಟು ಮುಂಚೆಯೇ ಚನ್ನಪಟ್ಟಣದ ತುಂಬೆಲ್ಲ ಶುಭಾಶಯ ಕೋರುವ ಫ್ಲೆಕ್ಸ್‌ಗಳನ್ನು ಹಾಕಿದ್ದರು. ಬೆಂಗಳೂರು-ಮೈಸೂರು ಹೆದ್ದಾರಿಯ ತುಂಬೆಲ್ಲ ಇವುಗಳೇ ತುಂಬಿಕೊಂಡಿದ್ದವು. ಆದರೆ ಯೋಗೇಶ್ವರ್‌ಗೆ ಅವಕಾಶ ಸಿಗದೇ ಮುಜುಗರ ಅನುಭವಿಸುವಂತೆ ಆಗಿತ್ತು. ಹೀಗಾಗಿ ಈ ಬಾರಿ ಕಾರ್ಯಕರ್ತರು ಸಂಭ್ರಮಾಚರಣೆಗೆ ಗುಟ್ಟಾಗಿ ಸಿದ್ಧತೆ ನಡೆಸಿದ್ದಾರೆ.

ಏನಂತಾರೆ ಸಿಪಿವೈ?

ತಮಗೆ ಸಚಿವ ಸ್ಥಾನ ಸಿಗುವ ಕುರಿತು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿ.ಪಿ. ಯೋಗೇಶ್ವರ್‌ ‘ನನಗೆ ಸಚಿವ ಸ್ಥಾನ ನೀಡುವ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಅವಕಾಶ ನೀಡುತ್ತೇನೆ ಎಂದು ಹಿಂದೆ ಮುಖ್ಯಮಂತ್ರಿಗಳು ಹೇಳಿದ್ದರು. ಅದಕ್ಕಾಗಿ ಧನ್ಯವಾದ. ಸಚಿವ ಸ್ಥಾನ ಎನ್ನುವುದು ಕೇವಲ ಖುಷಿ ಪಡುವ ಸಂಗತಿ ಅಲ್ಲ. ಅದೊಂದು ಜವಾಬ್ದಾರಿ. ಹಿಂದೊಮ್ಮೆ ಬಿಜೆಪಿ ಸರ್ಕಾರದಲ್ಲಿ ಸಚಿವನಾಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಈ ಬಾರಿ ಅವಕಾಶ ಕೊಟ್ಟರೆ ಇದನ್ನು ಬಳಸಿಕೊಂಡು ಇನ್ನಷ್ಟು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುತ್ತೇನೆ’ ಎಂದರು.

***
ಸಚಿವ ಸ್ಥಾನ ಎನ್ನುವುದು ಒಂದು ದೊಡ್ಡ ಜವಾಬ್ದಾರಿ. ಹಿಂದೊಮ್ಮೆ ಸಚಿವನಾಗಿದ್ದು, ಈ ಬಾರಿ ಅವಕಾಶ ಕೊಟ್ಟರೆ ಅದನ್ನು ಸೂಕ್ತವಾಗಿ ನಿಭಾಯಿಸುತ್ತೇನೆ.

- ಸಿ.ಪಿ. ಯೋಗೇಶ್ವರ್‌,ವಿಧಾನ ಪರಿಷತ್‌ ಸದಸ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT