ರೆಕ್ಕೆ ಕಡಿದ ಎಚ್ಡಿಕೆ: ನಿರ್ಮಾಪಕ ಸಿ.ಆರ್. ಮನೋಹರ್ ಆರೋಪ

ಆನೇಕಲ್: ವಿಧಾನಪರಿಷತ್ ಸದಸ್ಯತ್ವದ ಅವಧಿ ಇನ್ನೂ ಮೂರು ತಿಂಗಳಿದೆ. ಹಾಗಾಗಿ ಅವಧಿ ಪೂರ್ಣಗೊಳ್ಳುವವರೆಗೂ ಜೆಡಿಎಸ್ನಲ್ಲೇ ಇರುತ್ತೇನೆ. ಮುಂದಿನ ದಿನಗಳಲ್ಲಿ ರಾಜಕೀಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಚಿತ್ರ ನಿರ್ಮಾಪಕ ಸಿ.ಆರ್.ಮನೋಹರ್ ತಿಳಿಸಿದರು.
ಅವರು ತಾಲ್ಲೂಕಿನ ಸರ್ಜಾಪುರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಯಾವುದೇ ಪಕ್ಷದ ಮುಖಂಡರೊಂದಿಗೆ ಚರ್ಚಿಸಿಲ್ಲ. ಬೇರೆ ಪಕ್ಷಕ್ಕೆ ಸೇರ್ಪಡೆ ಕೇವಲ ಊಹಾಪೋಹವಷ್ಟೇ. ಜೆಡಿಎಸ್ನ ವರಿಷ್ಠ ಎಚ್.ಡಿ.ದೇವೇಗೌಡರೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಕ್ಷ ಬಿಟ್ಟು ಹೋಗುವುರಿಂದ ಯಾವುದೇ ಉಪಯೋಗವಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದವರು ಪ್ರಶ್ನಿಸಿದಾಗ, ‘ಈ ಬಗ್ಗೆ ಮಾಹಿತಿಯಿಲ್ಲ. ಆದರೆ, ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಅವರ ಅಧಿಕಾರ ಅವಧಿಯಲ್ಲಿ ಬೆಳೆಯಲು ಅವಕಾಶ ನೀಡಲಿಲ್ಲ. ರೆಕ್ಕೆಪುಕ್ಕ ಕಡಿದು ಹಾಕಿದರು’ ಎಂದು ಗಂಭೀರ ಆರೋಪ
ಮಾಡಿದರು.
ಕಳೆದ ಕೆಲ ದಿನಗಳಿಂದ ಜೆಡಿಎಸ್ನಿಂದ ಮಾನಸಿಕವಾಗಿ ದೂರವಾಗಿದ್ದೆ. ಆದರೆ, ಯಾವುದೇ ಹಂತದಲ್ಲೂ ಪಕ್ಷದ ಬಗ್ಗೆ ಅಥವಾ ನಾಯಕರಿಗೆ ಮುಜುಗರವಾಗುವಂತೆ ನಡೆದುಕೊಂಡಿಲ್ಲ ಎಂದರು.
ಪಕ್ಷದಲ್ಲಿರುವವರೆಗೂ ಪಕ್ಷದ ಸಿದ್ಧಾಂತಕ್ಕೆ ಬದ್ಧನಾಗಿದ್ದೇನೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬೇರೆ ಸಾಧ್ಯತೆ ನೋಡಿಕೊಳ್ಳಬೇಕಾಗುತ್ತದೆ. ಹಿತೈಷಿಗಳು, ಮುಖಂಡರೊಂದಿಗೆ ಚರ್ಚಿಸಿ ಮೂರು ತಿಂಗಳ ನಂತರ ಮುಂದಿನ ರಾಜಕೀಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.