ಕನಕಪುರ: ‘ಗ್ರಾಮ ಪಂಚಾಯಿತಿಯ ಆರ್ಥಿಕ ಮೂಲ ಹೆಚ್ಚಿಸಿಕೊಳ್ಳಬೇಕು. ಆಗ ಮಾತ್ರ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸಾಧ್ಯ’ ಎಂದು ಚೀಲೂರು ಗ್ರಾಮ ಪಂಚಾಯಿತಿ ಸದಸ್ಯರು ಒತ್ತಾಯಿಸಿದರು.
ಪಂಚಾಯಿತಿಯಲ್ಲಿ ಅಧ್ಯಕ್ಷೆ ಶೋಭಾ ರವಿಗೌಡ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗಾರಿಕೆಗಳಿವೆ. ಪ್ರತಿಷ್ಠಿತ ಕಾಲೇಜು, ವಿಶ್ವವಿದ್ಯಾಲಯ, ಮೆಡಿಕಲ್ ಕಾಲೇಜುಗಳಿವೆ. ಅವುಗಳಿಗೆ ತೆರಿಗೆ ವಿಧಿಸಿ ಸಮರ್ಪಕವಾಗಿ ವಸೂಲಿ ಮಾಡಬೇಕೆಂದು ಆಗ್ರಹಿಸಿದರು.
ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ಸಹಮತದಿಂದ ಕೆಲಸ ಮಾಡಬೇಕು. ಭಿನ್ನಾಭಿಪ್ರಾಯ, ಹೊಂದಾಣಿಕೆ ಕೊರೆತೆ ಇದ್ದರೆ ಪಂಚಾಯಿತಿಯಲ್ಲಿ ಸಾರ್ವಜನಿಕರ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ಕಿವಿಮಾತು ಹೇಳಿದರು.
ಹಳ್ಳಿಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ. ನಾಯಿಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕೆಂದು ಸದಸ್ಯರು ಒತ್ತಾಯಿಸಿದರು.
ಕೊರೊನಾ ಸಂದರ್ಭದಲ್ಲಿ ಕೆಲಸ ಮಾಡಿದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯಧನ ನೀಡಿಲ್ಲ. ಅವರಿಗೆ ತ್ವರಿತವಾಗಿಹಣ ನೀಡಬೇಕೆಂದು ಅಧಿಕಾರಿಗಳಿಗೆ ಒತ್ತಾಯಿಸಿದರು.
ಪಂಚಾಯಿತಿಗೆ ಆಯ್ಕೆಯಾಗಿರುವ ಸದಸ್ಯರು ಮಾತ್ರ ಪಂಚಾಯಿತಿ ಕಾರ್ಯ ಕಲಾಪಗಳಲ್ಲಿ ಪಾಲ್ಗೊಳ್ಳಬೇಕು. ಅದಕ್ಕೆ ಸಂಬಂಧಪಡದವರು ಅಥವಾ ಸದಸ್ಯೆಯರ ಪತಿಯಂದಿರು ಯಾವುದೇ ಕೆಲಸ ಕಾರ್ಯಗಳಲ್ಲಿ ಪಾಲ್ಗೊಳ್ಳಬಾರದು ಎಂದು ಹೇಳಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಉಪಾಧ್ಯಕ್ಷೆ, ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.