ರಾಮನಗರ: ರಾಜ್ಯದಲ್ಲಿ ಅತಿ ಹೆಚ್ಚು ಮಾವು ಬೆಳೆಯುವ ಎರಡನೇ ಜಿಲ್ಲೆಯಾದ ರಾಮನಗರದಲ್ಲಿ ಈ ಸಲ ಮಾವು ಇಳುವರಿ ಕೇವಲ ಶೇ 10–12. ಮಳೆ ಕೊರತೆ ಹಾಗೂ ಅತ್ಯಧಿಕ ತಾಪಮಾನದಿಂದಾಗಿ ಮಾವು ನೆಲ ಕಚ್ಚಿರುವ ಕುರಿತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಿರುವ ಮಾವು ಇಳುವರಿಯ ಅಂದಾಜು ವರದಿಯು, ತೀವ್ರ ಬರ ಎದುರಿಸುತ್ತಿರುವ ಜಿಲ್ಲೆಯ ಸ್ಥಿತಿಗೆ ಕನ್ನಡಿ ಹಿಡಿದಿದೆ.
ಜಿಲ್ಲೆಯಲ್ಲಿ ಸುಮಾರು 30,067 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಸುಮಾರು 28 ಸಾವಿರ ಬೆಳೆಗಾರರು ಮಾವು ಬೆಳೆಯನ್ನು ಅವಲಂಬಿಸಿದ್ದಾರೆ. ಜಿಲ್ಲೆಯಲ್ಲಿ ವರ್ಷಕ್ಕೆ ಸರಾಸರಿ 2.35 ಲಕ್ಷ ಮೆಟ್ರಿಕ್ ಟನ್ನಿಂದ 2.53 ಲಕ್ಷ ಮೆಟ್ರಿಕ್ ಟನ್ ಮಾವು ಉತ್ಪಾದನೆಯಾಗುತ್ತಿತ್ತು. ಈ ಸಲ ಬರದಿಂದಾಗಿ ಮಾವು ಇಳುವರಿಯ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿವೆ.
ಜಂಟಿ ಸಮೀಕ್ಷೆ: ‘ನೀರಿನ ಕೊರತೆಯಿಂದಾಗಿ ಮಾವು ಬೆಳೆ ನಷ್ಟವಾಗಿರುವುದರ ಕುರಿತು ಜಿಲ್ಲಾಧಿಕಾರಿ ಸೂಚನೆ ಮೇರೆಗೆ ತಾಲ್ಲೂಕುಗಳ ಮಟ್ಟದಲ್ಲಿ ಜಂಟಿ ಸಮೀಕ್ಷೆ ತಂಡಗಳನ್ನು ರಚಿಸಿ ಏಪ್ರಿಲ್ ತಿಂಗಳಲ್ಲಿ ಸಮಿಕ್ಷೆ ನಡೆಸಲಾಗಿತ್ತು. ತಂಡದ ಸದಸ್ಯರು ಆಯ್ದ ಮಾವು ಬೆಳೆಯುವ ಜಾಗಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ಸಿದ್ಧಪಡಿಸಿದ್ದರು. ಅದನ್ನು ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಲಾಗಿದೆ’ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಜು ಎಂ.ಎಸ್ ‘ಪ್ರಜಾವಾಣಿ’ಗೆ ತಿಳಿಸಿದರು.
‘ಜಿಲ್ಲೆಯಲ್ಲಿ ಶೇ 90–95ರಷ್ಟು ಮಾವು ಮಳೆಯಾಶ್ರಿತವಾಗಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಬೆಳೆಗಾರರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹಾಗಾಗಿ, ಜೀವನೋಪಾಯಕ್ಕಾಗಿ ಮಾವು ಅವಲಂಬಿಸಿರುವ ಬೆಳೆಗಾರರಿಗೆ ಪ್ರಕೃತಿ ವಿಕೋಪದಡಿ ಬೆಳೆ ಹಾನಿಯಾಗಿರುವುದನ್ನು ಪರಿಗಣಿಸಿ, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರ ಒದಗಿಸುವಂತೆ ಕೋರಲಾಗಿದೆ’ ಎಂದು ಹೇಳಿದರು.
ಜಿಲ್ಲೆಯಲ್ಲಿ ಮಾವು ಬೆಳೆಯು ನೆಲ ಕಚ್ಚಿರುವ ಕುರಿತು ನಡೆಸಿರುವ ಸಮೀಕ್ಷೆಯ ವರದಿಯನ್ನು ಜಿಲ್ಲಾಧಿಕಾರಿ ಮೂಲಕ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ– ರಾಜು ಎಂ.ಎಸ್ ಉಪ ನಿರ್ದೇಶಕ ತೋಟಗಾರಿಕೆ ಇಲಾಖೆ ರಾಮನಗರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.