ಚನ್ನಪಟ್ಟಣ: ಮಕ್ಕಳ ಉತ್ತಮ ಭವಿಷ್ಯಕ್ಕೆ ಶಿಕ್ಷಣ ಉತ್ತಮ ಪ್ರಭಾವ ಬೀರುತ್ತದೆ ಎಂದು ಯುವ ಕವಿ ಅಬ್ಬೂರು ಶ್ರೀನಿವಾಸ್ ತಿಳಿಸಿದರು.
ತಾಲ್ಲೂಕಿನ ಹರಿಸಂದ್ರ ಗ್ರಾಮದ ಕಟ್ಟಡ ನಿರ್ಮಾಣ ಕಾರ್ಮಿಕರ ಟೆಂಟ್ ಆವರಣದಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ನಿಂದ ಭಾನುವಾರ ಹಮ್ಮಿಕೊಂಡಿದ್ದ ವಾರದ ಕಲಿಕೆ-2 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳು ಸಶಕ್ತರಾಗಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಬೇಕು. ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಹತ್ತು ಹಲವು ಯೋಜನೆಗಳನ್ನು ರೂಪಿಸಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಹೊರೆಯಲ್ಲ. ಪೋಷಕರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಟ್ರಸ್ಟ್ ಕಾರ್ಯದರ್ಶಿ ವಿಜಯ್ ರಾಂಪುರ ಮಾತನಾಡಿ, ಬಯಲು ಶೌಚವು ಅಶುಚಿತ್ವ, ಅನಾರೋಗ್ಯಕ್ಕೆ ಎಡೆ ಮಾಡಿಕೊಡುತ್ತದೆ. ಶೌಚಾಲಯ, ಶುದ್ಧ ಕುಡಿಯುವ ನೀರು, ವಿದ್ಯುಚ್ಚಕ್ತಿ ಇತ್ಯಾದಿ ಮೂಲಸೌಕರ್ಯಗಳಿಲ್ಲದೆ ಪರಿತಪಿಸುತ್ತಿರುವ ಕಟ್ಟಡ ನಿರ್ಮಾಣ ಕಾರ್ಮಿಕರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದರು.
ಹಿರಿಯ ಜಾನಪದ ಗಾಯಕ ಚೌ.ಪು. ಸ್ವಾಮಿ, ಟ್ರಸ್ಟ್ ಅಧ್ಯಕ್ಷ ಸುಣ್ಣಘಟ್ಟ ಅಶ್ವಥ್, ಮುಖಂಡ ಮೊಗಳ್ಳಿ ರಾಜು ಭಾಗವಹಿಸಿದ್ದರು. ಕಾರ್ಮಿಕರ ಮಕ್ಕಳಿಗೆ ಅಕ್ಷರ ಕಲಿಸಲಾಯಿತು.