ರಾಮನಗರ: ‘ಪರಿಸರ ಸಂರಕ್ಷಣೆಯು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಅದು ನಮ್ಮ ಬದುಕಿನ ಭಾಗವಾಗಿ ಪ್ರತಿ ದಿನವೂ ನಾವು ಪರಿಸರ ಕಾಳಜಿ ಮಾಡಬೇಕು. ಪ್ರಕೃತಿಗೆ ಪೂರಕವಾಗಿ ನಾವು ಬದುಕಬೇಕೇ ಹೊರತು, ಅದು ನಮಗೆ ಪೂರಕವಾಗಿರುವುದಿಲ್ಲ. ನಮ್ಮ ಅಭಿವೃದ್ಧಿ ಚಟುವಟಿಕೆಗಳಿಂದ ಪ್ರಕೃತಿಗೆ ಹಾನಿಯುಂಟಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಹಾಗೂ ರಾಮನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ) ಸಹಯೋಗದಲ್ಲಿ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ಕಾರ್ಯಕ್ರಮದಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಹಸಿರಿನ ಮಹತ್ವವನ್ನು ಜಗತ್ತಿನಲ್ಲೆಡೆ ಸಾರುವುದಕ್ಕಾಗಿ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಪ್ರಾಮುಖ್ಯತೆಯನ್ನು ಆರಂಭದಿಂದಲೇ ಮಕ್ಕಳಿಗೆ ಹೇಳಿ ಕೊಡಬೇಕು. ಚಿಕ್ಕಂದಿನಿಂದಲೇ ಅವರಲ್ಲಿ ಪರಿಸರ ಸಂರಕ್ಷಣೆಯ ಮನೋಭಾವ ಬೆಳೆಸಬೇಕು. ಆಗ ಮಾತ್ರ ಮುಂದಿನ ಪೀಳಿಗೆಗೆ ನಾವು ನೋಡಿದ ಪ್ರಕೃತಿಯನ್ನು ಬಿಟ್ಟು ಹೋಗಲು ಸಾಧ್ಯ’ ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಶಶಿಧರ್ ಮಾತನಾಡಿ, ‘ಪ್ರಕೃತಿಯಿಂದ ಎಲ್ಲವನ್ನು ಪಡೆದುಕೊಳ್ಳುವ ನಾವು ಅದಕ್ಕೆ ಕೃತಜ್ಞರಾಗಿರಬೇಕು. ವರ್ಷದಿಂದ ವರ್ಷಕ್ಕೆ ತೀವ್ರವಾಗಿ ಏರುತ್ತಿರುವ ತಾಪಮಾನ, ನಿರಂತರ ವಾಯುಮಾಲಿನ್ಯ, ಜಲಮಾಲಿನ್ಯ, ಭೂಮಾಲಿನ್ಯವನ್ನು ಪರಿಸರ ಎದುರಿಸುತ್ತಿದೆ. ಈ ಸಮಸ್ಯೆಗಳು ತಾರಕಕ್ಕೇರಿ ಮನುಕುಲಕ್ಕೆ ಕುತ್ತು ಬರುವುದಕ್ಕೆ ಮುಂಚೆಯೇ ನಾವು ಪರಿಹಾರೋಪಾಯ ಕಂಡುಕೊಳ್ಳಬೇಕು’ ಎಂದು ಹೇಳಿದರು.
‘ತಂತ್ರಜ್ಞಾನದ ಪ್ರಭಾವದಿಂದಾಗಿ ಪೃಕೃತಿಯೊಂದಿಗಿನ ಮಕ್ಕಳ ಒಡನಾಟ ಇತ್ತೀಚೆಗೆ ಕಡಿಮೆಯಾಗುತ್ತಿದೆ. ಇಂದಿನ ಮಕ್ಕಳು ನಮ್ಮ ಸುತ್ತಮುತ್ತಲಿನ ಯಾವುದಾದರೂ ಕನಿಷ್ಟ ಐದು ಸಸ್ಯಗಳ ಹೆಸರು ಹೇಳದ ಸ್ಥಿತಿಯಲ್ಲಿದ್ದಾರೆ. ಪರಿಸರದೊದಿಗೆ ಪರಿಸರ ಸ್ನೇಹಿಯಾಗಿ ಬೆಳೆದು ದೊಡ್ಡವರಾಗಬೇಕಿದ್ದ ಮಕ್ಕಳು ತಂತ್ರಜ್ಞಾನದೊಂದಿಗೆ ಬೆಳೆಯುತ್ತಿದ್ದಾರೆ. ಹೀಗಾಗಿ, ಮಕ್ಕಳಲ್ಲಿ ಪರಿಸರ ಕಾಳಜಿ ಕ್ಷೀಣಿಸುತ್ತಿದೆ. ಪ್ರಕೃತಿ ರಕ್ಷಣೆ ದೃಷ್ಟಿಯಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಬೇಕಿದೆ’ ಎಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರ್ಪಿತ ಕೆ.ಜೆ, ‘ವರ್ಷದಿಂದ ವರ್ಷಕ್ಕೆ ಅರಣ್ಯದ ವ್ಯಾಪ್ತಿ ಕಡಿಮೆಯಾಗುತ್ತಿರುವುದು ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ಅನಾನುಕೂಲಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಆಗಬೇಕಿದೆ. ತಾಪಮಾನದ ಏರಿಕೆಯ ಪರಿಣಾಮಗಳನ್ನು ತಡೆಯುವುದಕ್ಕಾಗಿ ಹಸಿರೀಕರಣ ಹೆಚ್ಚಿಸಬೇಕಿದೆ’ ಎಂದು ತಿಳಿಸಿದರು.
ಜಿಲ್ಲಾ ಆರ್ಸಿಎಚ್ಒ ಡಾ. ರಾಜು, ಡಿಎಲ್ಒ ಡಾ. ಮಂಜುನಾಥ್, ಡಿಟಿಒ ಡಾ. ಕುಮಾರ್, ಮುಖ್ಯ ಶಿಕ್ಷಕ ಶಿವಸ್ವಾಮಿ, ಆರೋಗ್ಯ ಮೇಲ್ವಿಚಾರಕ ವಿಶ್ವೇಶ್ವರಯ್ಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜೇಂದ್ರ, ಜಿಲ್ಲಾ ಕೀಟಶಾಸ್ತ್ರಜ್ಞೆ ಸೌಮ್ಯ, ಆರೋಗ್ಯ ಸಿಬ್ಬಂದಿ, ಶಾಲಾ ಮಕ್ಕಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.