ರಾಮನಗರ: ಸೇವೆ ಕಾಯಂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗುತ್ತಿಗೆ ಪೌರಕಾರ್ಮಿಕರು ಶುಕ್ರವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ನಗರಸಭೆ ಪೌರಾಯುಕ್ತ ನಂದಕುಮಾರ್ ಅವರಿಗೆ ಮನವಿ ಸಲ್ಲಿಸಿದ ಬಿ.ಆರ್. ಅಂಬೇಡ್ಕರ್ ನೇರಪಾವತಿ ಪೌರಕಾರ್ಮಿಕರ ಸಂಘದ ಗೌರವ ಅಧ್ಯಕ್ಷ ರಾಮು ಮಾತನಾಡಿ, ‘ಹಲವು ವರ್ಷಗಳಿಂದ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲ. ಆದ್ದರಿಂದ ತೋಳಿಗೆ ಕಪ್ಪುಪಟ್ಟಿ ಧರಿಸಿ, ಪೌರ ಕಾರ್ಮಿಕರು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಾಂಕೇತಿಕವಾಗಿ ಹೋರಾಟ ಹಮ್ಮಿಕೊಂಡಿದ್ದೇವೆ’ ಎಂದರು.
ಮ್ಯಾನ್ಹೋಲ್ನಲ್ಲಿ ಇಳಿದು ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ಅವರು ಬಯಸಿದ ಸ್ಥಳದಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿ ನೀಡಬೇಕು. ರಾಜ್ಯದಲ್ಲಿ ಅತ್ಯಂತ ಅಭದ್ರತೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಬಾಕಿ ಉಳಿದಿರುವ ಹುದ್ದೆಗಳ ನೇರ ನೇಮಕಾತಿಗೆ ಸರಕಾರ ಚಾಲನೆ ನೀಡಬೇಕು ಎಂದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅತ್ಯಗತ್ಯ ಸೇವೆ ನಿರ್ವಹಿಸುತ್ತಿರುವ ತ್ಯಾಜ್ಯ ಸಾಗಿಸುವ ವಾಹನ ಚಾಲಕರು, ವಾಟರ್ಮನ್, ಡಾಟಾ ಆಪರೇಟರ್ಗಳಿಗೆ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರ ಹಿಂದೇಟು ಹಾಕಿದೆ ಎಂದು ದೂರಿದರು.
ಚಂದ್ರಶೇಖರ್, ಗಿರೀಶ್, ರವಿ, ತಿಮ್ಮರಾಜು, ಮುಕುಂದ, ತಿಪ್ಪಣ್ಣ, ಲೋಕೇಶ್ ಸೇರಿದಂತೆ ಪೌರಕಾರ್ಮಿಕರು ಉಪಸ್ಥಿತರಿದ್ದರು.