ರಾಮನಗರ: ಬಿಜೆಪಿ ಜೊತೆ ಮೈತ್ರಿ ಕುರಿತು ನಮ್ಮ ನಾಯಕ ಎಚ್.ಡಿ. ದೇವೇಗೌಡ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ. ಎಲ್ಲರೂ ಒಗ್ಗಟ್ಟಾಗಿ ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು.
ಬಿಜೆಪಿ- ಜೆಡಿಎಸ್ ಮೈತ್ರಿ ಬೆನ್ನಲ್ಲೇ ಬಿಡದಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ, ಎಚ್.ಡಿ. ದೇವೇಗೌಡ ಅವರ ನೇತೃತ್ವದಲ್ಲಿ ಭಾನುವಾರ ಪಕ್ಷದ ಶಾಸಕರು, ಪರಿಷತ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ ವೇಳೆ ಸುದ್ದಿಗಾರರ ಜೊತ ಅವರು ಮಾತನಾಡಿದರು.
ಪಕ್ಷದ ಸಂಘಟನೆ ಮತ್ತು ಮುಂದಿನ ಚುನಾವಣೆ ಎದುರಿಸುವ ಕುರಿತು ಸಭೆಯಲ್ಲಿ ಮುಕ್ತ ಚರ್ಚೆ ನಡೆಯುತ್ತಿದೆ. ಅಂತಿಮವಾಗಿ ಕಾರ್ಯಕಾರಿ ಸಮಿತಿ ತೆಗೆದುಕೊಳ್ಳುವ ನಿರ್ಧಾರವನ್ನು ನಾವೆಲ್ಲರೂ ಒಪ್ಪಿ, ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆ ಎಂದರು.
ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದಿಂದ ಹೆಚ್ಚು ಮುಖಂಡರು ಬಂದಿದ್ದಾರೆ. ಎಲ್ಲಾ ವಿಷಯಗಳ ಕುರಿತು ಮುಕ್ತವಾಗಿ ಚರ್ಚೆ ಮಾಡಲಾಗುತ್ತಿದೆ. ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು, ಮೈತ್ರಿ ಆಗಬೇಕಾದರೆ ಬಹಳ ಚರ್ಚೆ ಮಾಡಬೇಕು ಎಂದಿದ್ದಾರೆ. ಅದರಂತೆ ಎಲ್ಲರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರಿಗೆ ಅಧಿಕಾರ ಸಿಗುವಂತೆ ಮಾಡಲು ಶ್ರಮಿಸಲು ಒಪ್ಪಿದ್ದಾರೆ. ಶಾಸಕಿ ಕರಿಯಮ್ಮ ಅವರು ಬೇರೆ ರೀತಿಯಲ್ಲಿ ಮಾತಾಡಿದ್ದಾರೆ ಅಂತ ಮಾಧ್ಯಮದಲ್ಲಿ ವರದಿ ಬಂದಿದ್ದು ನೋಡಿದೆ. ಆದರೆ, ನಮ್ಮ ಕೋರ್ ಕಮಿಟಿಯಲ್ಲಿ ದೇವೇಗೌಡರ ನಿರ್ಧಾರಕ್ಕೆ ಬದ್ದ ಎಂದಿದ್ದಾರೆ. ಹಾಗಾಗಿ ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು.