ಚನ್ನಪಟ್ಟಣ: ‘ಪಿಎಫ್ಐ ಸಂಘಟನೆ ಯನ್ನು ನಿಷೇಧಿಸಿದ ತಕ್ಷಣ ಸಮಾಜದಲ್ಲಿ ಶಾಂತಿ ನೆಲಸುತ್ತಾ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಚನ್ನಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಾಮರಸ್ಯ, ಸೌಹಾರ್ದತೆ ಬೆಳೆಸುವ ಕೆಲಸವನ್ನು ಸರ್ಕಾರ ಮಾಡಬೇಕು. ಯಾವುದೇ ಒಂದು ಸಂಘಟನೆ ನಿಷೇಧ ಮಾಡಿದರೆ ಶಾಂತಿ ನೆಲೆಸಲ್ಲ ಎಂದು ಹೇಳಿದರು.
‘ಪಿಎಫ್ಐ ವಿರುದ್ಧ ದಾಖಲೆಗಳಿದ್ದರೆ ಅದನ್ನು ಜನರ ಮುಂದೆ ಇಡಬೇಕು. ಇದು ಕೇಂದ್ರ ಸರ್ಕಾರದ ಕರ್ತವ್ಯ.ಯಾವುದೇ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿದ್ದರೆ ಕಠಿಣ ಕ್ರಮ ಆಗಬೇಕು. ಯಾವ ಯಾವ ಸಂಘಟನೆಗಳಿಂದ ದೇಶ ದ್ರೋಹದ ಕೆಲಸ ಆಗಿದೆ. ಯಾವ ರೀತಿ ಗಲಭೆ ಸೃಷ್ಟಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ ಎಂಬ ಮಾಹಿತಿಯನ್ನು ಜನತೆಗೆ ತಿಳಿಸಬೇಕು’ ಎಂದರು.