ರಾಮನಗರ: ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಇದರ ನಿವಾರಣೆಗೆ ಆರೋಗ್ಯ ಶಿಬಿರ ಸಹಕಾರಿಯಾಗಲಿವೆ ಎಂದು ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಉಷಾ ಕದರಮಂಡಲಗಿ ಹೇಳಿದರು.
ಇಲ್ಲಿನ ಪ್ರಗತಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಭಾನುವಾರ ನಡೆದ ಉಚಿತ ಆರೋಗ್ಯ ತಪಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಕಾಯಿಲೆ ಬರುವ ಮುನ್ನವೇ ಎಚ್ಚರ ವಹಿಸಿದರೆ ಆಸ್ಪತ್ರೆ, ಗುಳಿಗೆ ಮುಂತಾದ ಕಷ್ಟಗಳಿಂದ ಪಾರಾಗಬಹುದು. ಗ್ರಾಮೀಣ ಪ್ರದೇಶದಲ್ಲಿಲಯೂ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಆರೋಗ್ಯ ಇದ್ದರೆ ನಾವು ಸುಖವಾಗಿ ಬಾಳಬಹುದು. ಕಷ್ಟಪಟ್ಟು ದುಡಿದ ಹಣವನ್ನು ಆಸ್ಪತ್ರೆಗೆ ಸುರಿಯುವ ಬದಲು ಕಾಯಿಲೆ ಬರದಂತೆ ತಡೆಯುವುದು ಜಾಣತನವಾಗಿದೆ. ಖಾಸಗಿ ಆಸ್ಪತ್ರೆಗಳು, ಸಂಘಸಂಸ್ಥೆಗಳು ಆಯೋಜಿಸುವ ಉಚಿತ ಆರೋಗ್ಯ ತಪಸಣಾ ಶಿಬಿರಗಳನ್ನು ಜನರು ಬಳಸಿಕೊಳ್ಳಬೇಕು ಎಂದರು.