ರಾಮನಗರ: ಸರ್ಕಾರಿ ನೌಕರರ ಸಂಘಕ್ಕೆ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರು ಪ್ರಾಮಾಣಿಕವಾಗಿ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಕೆ. ಬೈರಲಿಂಗಯ್ಯ ಹೇಳಿದರು.
ಇಲ್ಲಿನ ಸ್ಫೂರ್ತಿ ಭವನದಲ್ಲಿ ನಡೆದ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆಯಾದ ನಿರ್ದೇಶಕರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕಕ್ಕೆ 37 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದೀರಿ, 25 ಮಂದಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದೀರಿ. ಆಯಾ ಇಲಾಖೆಗಳ ಮೂಲಕ ಆಯ್ಕೆಯಾಗಿರುವವರು ಅಲ್ಲಿನ ನೌಕರರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನೌಕರರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.
ಚುನಾವಣಾಧಿಕಾರಿ ಕೆ. ಕರೀಗೌಡ, ಸಹಾಯಕ ಚುನಾವಣಾಧಿಕಾರಿ ಎಸ್. ವೆಂಕಟಪ್ಪ, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಕೆ. ಸತೀಶ್, ಡಿ. ಪುಟ್ಟಸ್ವಾಮಿ, ನಿರ್ದೇಶಕ ಎಸ್. ಮಂಜುನಾಥ್ ಇದ್ದರು.