ಮಾಗಡಿ (ರಾಮನಗರ): ‘ಪಕ್ಷದ ವರಿಷ್ಠರು ಸೂಚಿಸಿದರೆ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ, ಕೊಟ್ಟ ಜವಾಬ್ದಾರಿ ನಿಭಾಯಿಸುವೆ’ ಎಂದು ಬಿಜೆಪಿ ಮುಖಂಡ ಜಗದೀಶ ಶೆಟ್ಟರ್ ಹೇಳಿದರು.
ತಾಲ್ಲೂಕಿನ ಮರಳುದೇವನಪುರ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷವು ಬೂತ್ ಮಟ್ಟದಲ್ಲಿ ಸಂಘಟನೆ ಹೊಂದಿರುವ ಪಕ್ಷದ. ಹಾಗಾಗಿ, ಕಳೆದ ಬಾರಿ 25 ಸ್ಥಾನಗಳನ್ನು ಗೆದಿದ್ದ ಬಿಜೆಪಿ, ಈ ಸಲ 28 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ’ ಎಂದರು.
‘ರಾಜಕಾರಣದಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಸಹಜ. ಆದರೆ, ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿರುವುದರಿಂದ ಗೊಂದಲ ನಿವಾರಣೆಯಾಗಲಿದೆ. ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆಕಾಂಕ್ಷಿಗಳಿದ್ದು, ಟಿಕೆಟ್ಗಾಗಿ ಪೈಪೋಟಿ ಇದೆ. ಎರಡೂ ಪಕ್ಷಗಳ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ’ ಎಂದು ತಿಳಿಸಿದರು.
ಸಿ.ಎಂ.ಗೆ ಹಿಡಿತವಿಲ್ಲ: ‘ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಡಿತವೇ ಇಲ್ಲದಿರುವುದರಿಂದ ಹಲವು ಗೊಂದಲಗಳಿವೆ. ಅಧಿಕಾರಿಗಳು ಮತ್ತು ಸಚಿವರ ನಡುವೆ ಸಮನ್ವಯತೆ ಕೊರತೆ ಇದೆ. ಹೀಗಾಗಿ, ಯಡವಟ್ಟುಗಳಾಗುತ್ತಿವೆ’ ಎಂದು ಶಾಲಾ ಗೋಡೆ ಬರಹ ಗೊಂದಲ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.