ಚನ್ನಪಟ್ಟಣ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಸ್ವಂತ ಬಲದ ಮೇಲೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ’ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನ ಕೋಡಂಬಳ್ಳಿ ಜಿ. ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಶನಿವಾರ ಪ್ರವಾಸ ನಡೆಸಿ ವಿರುಪಾಕ್ಷಿಪುರ ಗ್ರಾಮದಲ್ಲಿ ಆಯೋಜಿಸಿದ್ದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ರಾಜ್ಯದಾದ್ಯಂತ ಜೆಡಿಎಸ್ಗೆ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ. ಈ ಬಾರಿ ಜೆಡಿಎಸ್ ಇತರ ಯಾವುದೇ ಪಕ್ಷದ ಬೆಂಬಲವಿಲ್ಲದೆ ಸರ್ಕಾರ ರಚಿಸುವುದು ಖಚಿತ ಎಂದು ಹೇಳಿದರು.
‘ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಇತಿಹಾಸದಲ್ಲಿ ಯಾವ ಮುಖ್ಯಮಂತ್ರಿಯು ನೀಡದಷ್ಟು ಕೊಡುಗೆಗಳನ್ನು ರಾಜ್ಯದ ಜನತೆಗೆ ನೀಡಿದ್ದಾರೆ. ಅಲ್ಲದೆ, 2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಮುಖ್ಯಮಂತ್ರಿಯಾಗುವ ಮೂಲಕ ಜನತೆಗೆ ಪಕ್ಷ ನೀಡಿರುವ ಭರವಸೆಗಳನ್ನು ಈಡೇರಿಸಲಿದ್ದಾರೆ. ತಮ್ಮ ಅನಾರೋಗ್ಯವನ್ನು ಲೆಕ್ಕಿಸದೆ, ರಾಜ್ಯವ್ಯಾಪಿ ಪಂಚರತ್ನ ರಥಯಾತ್ರೆ ಮೂಲಕ ಜನಾಶೀರ್ವಾದ ಪಡೆಯುತ್ತಿದ್ದಾರೆ. ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಾದ ಜವಾಬ್ದಾರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಮೇಲಿದೆ’ ಎಂದರು.
ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ₹26 ಕೋಟಿ ರೈತರ ಸಾಲಮನ್ನಾ ಮಾಡುವ ಮೂಲಕ ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ರೈತರ ನೆರವಿಗೆ ನಿಂತಿದ್ದರು. ಮುಂದೆ ಒಂದನೇ ತರಗತಿಯಿಂದ 12ನೇ ತರಗತಿವರೆಗೆ ಉತ್ತಮ ಗುಣಮಟ್ಟದ ಉಚಿತ ಶಿಕ್ಷಣ, ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವಾ ಸೌಲಭ್ಯ, ನಿರುದ್ಯೋಗಿಗಳಿಗೆ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಉದ್ಯೋಗಾವಕಾಶ, ರೈತಾಪಿ ವರ್ಗಕ್ಕೆ ಹಲವು ರೀತಿಯ ಯೋಜನೆಗಳನ್ನು ನೀಡಲು ಯೋಜಿಸಿದ್ದಾರೆ ಎಂದು ತಿಳಿಸಿದರು.
ಬಳಿಕ ನಿಖಿಲ್ ಕುಮಾರಸ್ವಾಮಿ ತಾಲ್ಲೂಕಿನ ಕೋಡಂಬಹಳ್ಳಿ, ಜೆ. ಬ್ಯಾಡರಹಳ್ಳಿ, ಎಲೆತೋಟದಹಳ್ಳಿ, ಸಾಮಂದಿಪುರ, ಸಿಂಗರಾಜಪುರ, ಬಿ.ವಿ. ಹಳ್ಳಿ, ಭೂಹಳ್ಳಿ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಸ ನಡೆಸಿ, ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು.
ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು, ಗೋವಿಂದಹಳ್ಳಿ ನಾಗರಾಜು, ಹಾಪ್ಕಾಮ್ಸ್ ದೇವರಾಜು, ಕುಕ್ಕೂರುದೊಡ್ಡಿ ಜಯರಾಮು, ಮಾರೇಗೌಡ, ಭಾನುಪ್ರಸಾದ್, ಮಲ್ಲೇಶ್, ಅಭಿಗೌಡ, ಹರ್ಷ, ವಿನೋದ್, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.