ರಾಮನಗರ: ರಾಜ್ಯದಲ್ಲಿರುವ ಕೈಗಾರಿಕೆಗಳು ಉದ್ಯೋಗ ನೀಡುವಾಗ ಕನ್ನಡಿಗ ಪ್ರತಿಭಾವಂತ ಯುವಜನರನ್ನು ಆದ್ಯತೆಯ ಮೇರೆಗೆ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.
ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಘಟಕಕ್ಕೆ ಸೋಮವಾರ ಭೇಟಿ ನೀಡಿ ಕಂಪನಿಯ ಉನ್ನತ ಅಧಿಕಾರಿಗಳ ಜತೆ ಅವರು ಸಮಾಲೋಚನೆ ನಡೆಸಿದರು. ಕಂಪನಿಯಲ್ಲಿ ಸ್ಥಳೀಯ ಪ್ರತಿಭಾವಂತರಿಗೆ ಯಾವುದೇ ಕಾರಣಕ್ಕೂ ಅನ್ಯಾಯ ಆಗಬಾರದು. ಅನಗತ್ಯವಾಗಿ ಹೊರರಾಜ್ಯದವರನ್ನು ಕರೆತಂದು ತುಂಬಿಸಬಾರದು ಎಂದು ಕಿವಿಮಾತು ಹೇಳಿದರು.
ರಾಜ್ಯದಲ್ಲಿ ಅತ್ಯುತ್ತಮ ಗುಣಮಟ್ಟದ ತಾಂತ್ರಿಕ ಶಿಕ್ಷಣ ವ್ಯವಸ್ಥೆ ಇದ್ದು, ಪ್ರತಿಭಾವಂತ ಮಾನವ ಸಂಪನ್ಮೂಲ ಲಭ್ಯವಿದೆ. ಹೀಗಾಗಿ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಬೇಕು ಎಂದರು.
ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಶಾಸಕರಾದ ಮಂಜುನಾಥ್, ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ರಾಜು ಕೇತ್ಕಲೆ ಮತ್ತು ಸ್ವಪ್ನೇಶ್ ಮಾರು, ಉಪಾಧ್ಯಕ್ಷರಾದ ಶಂಕರ್ ಮತ್ತು ವಿನಯ್ ಹಾಗೂ ಕಾರ್ಯನಿರ್ವಾಹಕ ಸಲಹೆಗಾರ ಪರಶುರಾಮ್ ಉಪಸ್ಥಿತರಿದ್ದರು.