ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಸಂಭಾವ್ಯ ಅಭ್ಯರ್ಥಿ ಎಂದೇ ಬಿಂಬಿಸಲ್ಪಟ್ಟಿದ್ದ ಪ್ರಸನ್ನ ಗೌಡ ಜೆಡಿಎಸ್ ಸೇರುವುದಾಗಿ ಘೋಷಿಸಿದ್ದಾರೆ.
ಭಾನುವಾರ ಮೈಸೂರಿನಲ್ಲಿ ನಡೆದಿರುವ ಪಂಚರತ್ನ ಯಾತ್ರೆ ಸಮಾರೋಪಕ್ಕೂ ಮುನ್ನ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಎದುರು ಅವರು ಈ ಘೋಷಣೆ ಮಾಡಿದರು.
ಈ ಸಂದರ್ಭ ಮಾತನಾಡಿದ ಪ್ರಸನ್ನ ಗೌಡ ' ನಾನು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಬೇಕಿತ್ತು. ಆದರೆ ಕಾಂಗ್ರೆಸ್ ನಾಯಕತ್ವದಿಂದ ಬೇಸತ್ತಿದ್ದೇನೆ. ಆ ಪಕ್ಷದಲ್ಲಿ ಸ್ಪಷ್ಟ ನಿಲುವು ಇಲ್ಲ. ಸುಳ್ಳು ಘೋಷಣೆಗಳನ್ನು ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ನಾಯಕತ್ವ ಮೆಚ್ಚಿ ಜೆಡಿಎಸ್ ಸೇರುತ್ತಿದ್ದೇನೆ' ಎಂದರು.
ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿಯೂ ಆಗಿರುವ ಕುಮಾರಸ್ವಾಮಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಕೆಲಸ ಮಾಡುವುದಾಗಿ ಪ್ರಸನ್ನ ಹೇಳಿದ್ದಾರೆ. ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರು.
ಶನಿವಾರವಷ್ಟೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಆಗಿದ್ದು, ಅದರಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಆಗಿರಲಿಲ್ಲ. ಅದರ ಚೆನ್ನಲ್ಲೇ ಪ್ರಸನ್ನ ಜೆಡಿಎಸ್ ಸೇರಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ತವರು ಜಿಲ್ಲೆಯಲ್ಲೇ ಹಿನ್ನಡೆ ಆದಂತೆ ಆಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.