ರಾಮನಗರ: ಜಿಲ್ಲೆಗೆ ಈ ಬಾರಿ ಸಚಿವ ಸ್ಥಾನ ಕೈ ತಪ್ಪಿದ್ದು, ಚನ್ನಪಟ್ಟಣದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊದಲೆರಡು ಬಾರಿಯ ಸಂಪುಟ ವಿಸ್ತರಣೆಯಲ್ಲಿಯೂ ಯೋಗೇಶ್ವರ್ ಅವರಿಗೆ ಅವಕಾಶ ದೊರೆತಿರಲಿಲ್ಲ. ನಂತರದಲ್ಲಿ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ನಂತರ ಪ್ರವಾಸೋದ್ಯಮ, ಪರಿಸರ ಸಚಿವರಾಗಿ ಜವಾಬ್ದಾರಿ ನೀಡಲಾಗಿತ್ತು.
ಬೊಮ್ಮಾಯಿ ಅವರ ಸಂಪುಟದಲ್ಲೂ ಸಚಿವ ಸ್ಥಾನ ಪಡೆಯಲು ಯೋಗೇಶ್ವರ್ ಸಾಕಷ್ಟು ಪ್ರಯತ್ನ ನಡೆಸಿದ್ದರು. ಕಳೆದ ಕೆಲವು ದಿನದಿಂದ ದೆಹಲಿಯಲ್ಲೇ ಉಳಿದು ಹೈಕಮಾಂಡ್ ಗಮನ ಸೆಳೆಯಲು ಪ್ರಯತ್ನ ಮಾಡಿದ್ದರು. ಆದರೆ ಅದು ಫಲ ನೀಡಿಲ್ಲ.
ಸದ್ಯ ಚನ್ನಪಟ್ಟಣದಲ್ಲಿರುವ ಯೋಗೇಶ್ವರ್ ನಿವಾಸ ಖಾಲಿಯಾಗಿದೆ. ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದ ಸಿಪಿವೈ ಅಭಿಮಾನಿಗಳು ನಿರಾಸೆ ಅನುಭವಿಸಿದ್ದಾರೆ.