ರಾಮನಗರ: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಿಚಾರದಲ್ಲಿ ಯಾವುದೇ ಅಕ್ರಮಗಳು ನಡೆದಿದ್ದರೂ ನಿಷ್ಪಕ್ಷಪಾತ ವಾಗಿ ತನಿಖೆ ನಡೆಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ನಗರದಲ್ಲಿ ಗುರುವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ಪರೀಕ್ಷೆ ವಿಚಾರದಲ್ಲಿ ಒಂದೆರಡು ಸಂಗತಿಗಳು ಈಗಷ್ಟೇ ಬೆಳಕಿಗೆ ಬಂದಿವೆ. ನಾವು ಯಾವುದನ್ನೂ ಮುಚ್ಚಿಟ್ಟಿಲ್ಲ. ಎಲ್ಲವನ್ನೂ ತನಿಖೆಗೆ ಒಳಪಡಿಸುತ್ತೇವೆ ಎಂದರು.
ನೇಮಕಾತಿ ಅಕ್ರಮಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಸಂಸದ ಡಿ.ಕೆ. ಸುರೇಶ್ ಒತ್ತಾಯದ ಕುರಿತು ಪ್ರತಿಕ್ರಿಯಿಸಿ ' ಅವರ ಬಾಯಲ್ಲಿ ಇಂತಹ ವಿಚಾರ ಕೇಳಿದ್ದಕ್ಕೆ ಖುಷಿಯಾಗುತ್ತಿದೆ. ಭ್ರಷ್ಟಾಚಾರವನ್ನೇ ಹೊದ್ದು ಮಲಗಿದವರು ಈಗ ಎದ್ದು ನಿಂತಿದ್ದಾರೆ' ಎಂದು ಲೇವಡಿ ಮಾಡಿದರು.
ಚನ್ನಪಟ್ಟಣ ತಹಶೀಲ್ದಾರ್ ವರ್ಗಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಆಗಿಲ್ಲ. ಕುಮಾರಸ್ವಾಮಿ ಕ್ಷೇತ್ರದ ಶಾಸಕರು. ಅವರ ಮಾತಿಗೂ ಬೆಲೆ ಕೊಡಬೇಕಾಗುತ್ತದೆ. ಹಾಗಂದ ಮಾತ್ರಕ್ಕೆ ಯಾರೊಂದಿಗೂ ಹೊಂದಾಣಿಕೆಯ ಪ್ರಶ್ನೆ ಇಲ್ಲ ಎಂದು ಅಶ್ವತ್ಥನಾರಾಯಣ ಹೇಳಿದರು.