ಚನ್ನಪಟ್ಟಣ: ಗ್ರಾಮೀಣ ಭಾಗದ ಜನರು ಕಾನೂನಿನ ಅರಿವಿನ ಕೊರತೆ ಕಾರಣಕ್ಕಾಗಿ ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದು, ಅವರಿಗೆ ಸೂಕ್ತ ಕಾನೂನಿನ ಅರಿವು ಮತ್ತು ಸಲಹೆ ಅವಶ್ಯಕವಾಗಿದೆ ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ. ಗಿರೀಶ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಬೈರಾಪಟ್ಟಣ ಬಮೂಲ್ ಶಿಬಿರ ಕಚೇರಿಯಲ್ಲಿ ಚನ್ನಪಟ್ಟಣ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಚನ್ನಪಟ್ಟಣ ವಕೀಲರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಭಾಗದ ಅನೇಕರಲ್ಲಿ ಆಸ್ತಿ ಜಂಜಾಟ, ಕೌಟುಂಬಿಕ ಕಲಹ ಸೇರಿದಂತೆ ಇನ್ನಿತರ ಸಮಸ್ಯೆಗಳಿರುತ್ತವೆ. ಕಾನೂನಿನ ಅರಿವು ಇಲ್ಲದ ಕಾರಣಕ್ಕೆ ಕೆಲವೊಮ್ಮೆ ಕಲಹಗಳು ವಿಕೋಪಕ್ಕೆ ಹೋಗಿ ಕೋರ್ಟ್, ಕಚೇರಿ ಅಲೆಯುವ ಪರಿಸ್ಥಿತಿ ಉಂಟಾಗುತ್ತವೆ. ಇಂತಹ ಘಟನೆಗಳನ್ನು ತಪ್ಪಿಸಲು ಇಂತಹ ಕಾರ್ಯಕ್ರಮದ ಮೂಲಕ ಜನರಿಗೆ ಕಾನೂನಿನ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಸಹಾಯಕ ಸರ್ಕಾರಿ ಅಭಿಯೋಜಕಿ ಶಾರದಾ ಮಾತನಾಡಿ, ಪ್ರತಿನಿತ್ಯದ ಚಟುವಟಿಕೆಗಳನ್ನು ನೆಮ್ಮದಿಯಾಗಿ ನಡೆಸಲು ಕಾನೂನು ಅರಿವು ಪಡೆಯುವುದು ಅಗತ್ಯವಾಗಿದೆ. ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯತೆ ಇದೆ. ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಾಗದೇ ಇರಬಹುದು, ಆದರೆ ನಮ್ಮ ದೈನಂದಿನ ಜೀವನ ಯಾವುದೇ ಅಡೆತಡೆಯಿಲ್ಲದೇ ನೆಮ್ಮದಿಯಿಂದ ಸಾಗಲು ಅಲ್ಪ ಪ್ರಮಾಣದಲ್ಲಾದರೂ ಕಾನೂನು ಅರಿವು ಪಡೆಯಬೇಕು ಎಂದು ಕಿವಿಮಾತು ಹೇಳಿದರು.
ಚನ್ನಪಟ್ಟಣ ವಕೀಲರ ಸಂಘದ ಖಜಾಂಚಿ ಹೇಮಂತ್, ಬಮೂಲ್ ಶಿಬಿರ ಕಚೇರಿ ವಿಸ್ತರಣಾಧಿಕಾರಿ ಆನಂದ್ ಕುಮಾರ್, ಕೃಷಿ ಅಧಿಕಾರಿ ಜಿತೇಂದ್ರ ಕುಮಾರ್, ಬಮೂಲ್ ಕಚೇರಿಯ ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.