ಮಾಗಡಿ: ಪಟ್ಟಣದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಜುಲೈ 1ರವರೆಗೆ ಸಾರ್ವಜನಿಕರ ಅಭಿಪ್ರಾಯದ ಮೇರೆಗೆ ಸ್ವಯಂಪ್ರೇರಿತ ಲಾಕ್ಡೌನ್ ಜಾರಿಗೊಳಿಸಲಾಗಿದೆ ಎಂದು ಶಾಸಕ ಎ.ಮಂಜುನಾಥ ತಿಳಿಸಿದರು.
ಸೋಮವಾರ ಕೋವಿಡ್-19 ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಲಾಕ್ಡೌನ್ ಸಮಯದಲ್ಲಿ ಬೆಳಿಗ್ಗೆ 7ರಿಂದ 10ರವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳು ವ್ಯವಹಾರ ನಡೆಸಬಹುದು. ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ಮದ್ಯದ ಅಂಗಡಿ ಬಂದ್ ಮಾಡುವ ಕುರಿತು ತೀರ್ಮಾನಿಸಲಾಗುವುದು ಎಂದರು.
ಗ್ರಾಮೀಣ ಭಾಗದ ರೈತರ ಮನೆ ಬಾಗಿಲಿಗೆ ಬ್ಯಾಂಕ್ ಪ್ರತಿನಿಧಿಗಳು ಭೇಟಿ ನೀಡಿ ವ್ಯವಹಾರ ನಡೆಸಲಿದ್ದಾರೆ. ರೈತರು ಪಟ್ಟಣದತ್ತ ಬರುವುದು ಬೇಡ. ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಪಡಿತರ ವಿತರಿಸಲು ಸೂಚಿಸಿದರು.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆ ಮತ್ತು ಹುಲಿಕಟ್ಟೆ ಕ್ವಾರಂಟೈನ್ ಕೇಂದ್ರಗಳು ರೋಗಹರಡುವ ತಾಣಗಳಾಗಿವೆ. ಶೌಚಾಲಯಗಳು ಸ್ವಚ್ಛಗೊಳಿಸುತ್ತಿಲ್ಲ. ಸರಿಯಾದ ಊಟ ನೀಡುತ್ತಿಲ್ಲ ಎಂದು ಆರೋಪಗಳಿದ್ದು ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕನಕಪುರ ತಾಲ್ಲೂಕಿನ ತೋಟಳ್ಳಿಯಲ್ಲಿ ಕೊರೊನಾ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಅಚ್ಚಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಯಂಪ್ರೇರಿತ ಲಾಕ್ಡೌನ್ ಘೋಷಿಸಲಾಗಿದೆ.