ರಾಮನಗರ: ಮಾಸ್ತಿಗುಡಿ ಚಲನಚಿತ್ರದ ಚಿತ್ರೀಕರಣದ ಸಂದರ್ಭ ಇಬ್ಬರು ಖಳನಟರ ಸಾವು ಪ್ರಕರಣದಲ್ಲಿ ತಮ್ಮನ್ನು ಕೈಬಿಡುವಂತೆ ಕೋರಿ ಸಲ್ಲಿಕೆಯಾಗಿದ್ದ ಆರು ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ನ್ಯಾಯಾಲಯವು ಶನಿವಾರ ವಜಾ ಮಾಡಿತು.
ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ರಾಮನಗರದ ಮೂರನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಿದ್ಧಲಿಂಗಪ್ರಭು ಅವರು ಆದೇಶ ನೀಡಿದರು.
ಆರೋಪಿ ಪ್ರಕಾಶ್ ಬಿರಾದರ್ ವಿರುದ್ಧ ಸ್ಯಾಕ್ಷ್ಯಾಧಾರ ಕೊರತೆ ಹಿನ್ನಲೆಯಲ್ಲಿ ಅವರನ್ನು ಪ್ರಕರಣದಿಂದ ಕೈಬಿಡಲಾಯಿತು. ಶೂಟಿಂಗ್ ವೇಳೆ ಪ್ರಕಾಶ್ ಬಿರಾದರ್ ಹೆಲಿಕಾಪ್ಟರ್ ಚಾಲನೆ ಮಾಡಿದ್ದರು. ಬಿರಾದರ್ ಪರ ಹಿರಿಯ ವಕೀಲ ಐ.ಎಸ್. ದಿಲೀಪ್ಕುಮಾರ್ ಪ್ರಬಲವಾಗಿ ವಾದ ಮಂಡಿಸಿದರು.
ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ನಿರ್ಮಾಪಕ ಸುಂದರ್ ಪಿ. ಗೌಡ, ನಿರ್ದೇಶಕ ರಾಜಶೇಖರ್, ಸಿದ್ದಾರ್ಥ್ ಅಲಿಯಾಸ್ ಸಿದ್ದು, ಸಾಹಸ ನಿರ್ದೇಶಕ ರವಿವರ್ಮಾ ಮತ್ತು ಎ.ಪಿ.ಭರತ್ ರಾವ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತು.
ಪ್ರಕರಣದ ಹಿನ್ನೆಲೆ: ನಟ ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ 2016ರ ನ.7 ರಂದು ಮಾಗಡಿ ಸಮೀಪದ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಈ ದುರಂತ ಸಂಭವಿಸಿತ್ತು. ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಹೆಲಿಕಾಪ್ಟರ್ನಿಂದ 100 ಅಡಿ ಎತ್ತರದಿಂದ ಖಳನಟ ಅನಿಲ್, ಉದಯ್ ಹಾಗೂ ನಾಯಕ ನಟ ದುನಿಯಾ ವಿಜಯ್ ಜಲಾಶಯಕ್ಕೆ ಜಿಗಿದಿದ್ದರು.
ಈ ವೇಳೆ ದುನಿಯಾ ವಿಜಯ್ ಅವರನ್ನು ತೆಪ್ಪದ ಮೂಲಕ ರಕ್ಷಣೆ ಮಾಡಿದ್ದರೆ, ಅನಿಲ್ ಮತ್ತು ಉದಯ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಚಿತ್ರತಂಡದ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರು ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.