‘ಕೆಆರ್ಎಸ್ ಸುತ್ತ ಗಣಿಗಾರಿಕೆ ನಿಷೇಧಿಸಿ’

ರಾಮನಗರ: ಕೆಆರ್ಎಸ್ ಅಣೆಕಟ್ಟೆ ಸುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸುವಂತೆ ಒತ್ತಾಯಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕ ಮನವಿ ಸಲ್ಲಿಸಿದರು.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಅಣೆಕಟ್ಟೆ ಸಮೀಪ 10 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸುವ ಭರವಸೆ ನೀಡಿದ್ದಾರೆ. ಆದರೆ, ಅಧ್ಯಯನ ವರದಿಗಳ ಶಿಫಾರಸಿನಂತೆ ಈ ಅಂತರವನ್ನು 20 ಕಿ.ಮೀ.ಗೆ ವಿಸ್ತರಿಸಬೇಕು. ಸ್ಥಳ ಪರಿಶೀಲನೆ ನಡೆಸಿ ಸತ್ಯಾಸತ್ಯತೆಯ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಪರಿಸರ ತಜ್ಞರ ಸಮಿತಿ ರಚಿಸಿ ಅಕ್ರಮ ಗಣಿಗಾರಿಕೆಯನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಅಕ್ರಮ ಗಣಿಗಾರಿಕೆ ದಂಧೆಕೋರರ ಹಿಂದೆ ಪ್ರಭಾವಶಾಲಿಗಳಿರುವುದರಿಂದ ರಾಜ್ಯ ಸರ್ಕಾರಕ್ಕೆ ಬರುವ ರಾಜಧನವೂ ನಿಂತಿದೆ. ಈ ರಾಜಧನ ವಂಚಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಣೆಕಟ್ಟು ಭದ್ರತೆ ಪರಿಶೀಲನಾ ಸಮಿತಿಯು ಕೆಆರ್ಎಸ್ ಅಣೆಕಟ್ಟೆ ಭದ್ರತೆಯ ಕುರಿತು ವರದಿಯನ್ನು ಸರ್ಕಾರಕ್ಕೆ ನೀಡಬೇಕು ಎಂದು ಒತ್ತಾಯಿಸಿದರು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಂ. ವೆಂಕಟಸ್ವಾಮಿ ನೇತೃತ್ವವಹಿಸಿದ್ದರು. ಪಕ್ಷದ ರಾಜ್ಯ ಉಪಾಧ್ಯಕ್ಷ ಪಿಳ್ಳರಾಜು ಬೋಸಪ್ಪ, ಯುವ ಘಟಕದ ಅಧ್ಯಕ್ಷ ಜಿ. ಗೋವಿಂದಯ್ಯ, ಜಿ.ಸಿ. ವೆಂಕಟರಮಣಪ್ಪ, ಭವಾನಿ ಪ್ರಸಾದ್, ಎಂ. ಚಂದ್ರಶೇಖರ್, ಡಿ.ಎಂ. ಅಂಬರೀಶ್ , ಎಂ. ರಾಮಯ್ಯ, ಶಿವಮಾದು, ಹರೀಶ್ ಬಾಲು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.