ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ: ಬರ ಸ್ಥಿತಿ ಸೂಕ್ತ ನಿರ್ವಹಣೆಗೆ ಶಾಸಕ ಇಕ್ಬಾಲ್ ಹುಸೇನ್ ಸೂಚನೆ

Published 1 ಡಿಸೆಂಬರ್ 2023, 15:26 IST
Last Updated 1 ಡಿಸೆಂಬರ್ 2023, 15:26 IST
ಅಕ್ಷರ ಗಾತ್ರ

ರಾಮನಗರ: ರಾಮನಗರ ತಾಲ್ಲೂಕು ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದು, ಅಧಿಕಾರಿಗಳು ಸರ್ಕಾರದ ಸವಲತ್ತುಗಳನ್ನು ಜನತೆಗೆ ತಲುಪಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ತಮ್ಮ ಕಚೇರಿಯಲ್ಲಿಯೇ ಕುಳಿತು ಕಾಲ ಕಳೆಯಬಾರದು. ಸರ್ಕಾರದ ಸವಲತ್ತುಗಳು ಹಾಗೂ ಮಾಹಿತಿಯ ಕುರಿತು ಜನತೆಗೆ ಪ್ರಚಾರ ಮಾಡಬೇಕು. ಯಾವುದೇ ಕಾರಣಕ್ಕೂ ಬರ ಪರಿಹಾರ ರೈತರ ಕೈತಪ್ಪದಂತೆ ನೋಡಿಕೊಳ್ಳಬೇಕು. ಮಧ್ಯವರ್ತಿಗಳನ್ನು ನಿಯಂತ್ರಿಸಿ ನೇರವಾಗಿ ರೈತರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಪಾಲಿ ಹೌಸ್ ನಿರ್ಮಾಣ ಮಾಡಲು ತಾಲ್ಲೂಕಿನಲ್ಲಿ ಯಾರೂ ಮುಂದೆ ಬರುತ್ತಿಲ್ಲ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇದರ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, ಈ ಬಗ್ಗೆ ಪಟ್ಟಿ ನೀಡಿ, ನಾನೇ ರೈತರಿಗೆ ಮಾಹಿತಿ ನೀಡಿ ಕಳುಹಿಸಿಕೊಡುತ್ತೇನೆ ಎಂದರು.

ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ 232 ಶಿಕ್ಷಕರು, ಪ್ರೌಢಶಾಲೆಯಲ್ಲಿ 40 ಶಿಕ್ಷಕರ ಕೊರತೆ ಇದೆ ಎಂದು ಶಿಕ್ಷಣ ಇಲಾಖೆ ಬಿಇಒ ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಉತ್ತರಿಸಿದ ಶಾಸಕರು, ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ಪಾಠ ಮಾಡಿಸಿ ಜತೆಗೆ, ಎಸ್ಸೆಸ್ಸೆಲ್ಸಿ ಮಕ್ಕಳಿಗೆ ವಿಶೇಷ ತರಗತಿ ನಡೆಸಿ, ಪ್ರಶ್ನೆಪತ್ರಿಕೆ ಪರಾಮರ್ಶೆ ಮಾಡಿಸಿ. ಈ ಬಾರಿಯ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ತರಬೇಕು ಎಂದು ಸೂಚಿಸಿದರು.

ಆರೋಗ್ಯ ಇಲಾಖೆ ಅಧಿಕಾರಿಗಳು ತಾಲ್ಲೂಕಿನ ಶಾಲೆಗಳಿಗೆ ತೆರಳಿ ಮಕ್ಕಳ ಆರೋಗ್ಯ ಪರೀಕ್ಷೆ ನಡೆಸಬೇಕು. ಮಕ್ಕಳಲ್ಲಿ ಆರೋಗ್ಯ ಏರುಪೇರಾಗುತ್ತಿದೆ. ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ತಹಶೀಲ್ದಾರ್ ತೇಜಸ್ವಿನಿ, ತಾ.ಪಂ. ಇಒ ಪ್ರದೀಪ್, ಡಿವೈಎಸ್ಪಿ ದಿನಕರ್ ಶೆಟ್ಟಿ, ಪೌರಾಯುಕ್ತ ನಾಗೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಗೆ ಗೈರು: ಅಧಿಕಾರಿ ವಿರುದ್ಧ ಶಾಸಕ ಗರಂ
ಪ್ರಗತಿಪರಿಶೀಲನಾ ಸಭೆಗೆ ಗೈರು ಹಾಜರಾಗಿ ತಮ್ಮ ಸಹಾಯಕರನ್ನು ಸಭೆಗೆ ಕಳುಹಿಸಿದ ಮೀನುಗಾರಿಕೆ ಇಲಾಖೆ ಅಧಿಕಾರಿ ವಿರುದ್ಧ  ಶಾಸಕ ಇಕ್ಬಾಲ್ ಹುಸೇನ್ ಗರಂ ಆದರು. ‘ನೀವ್ಯಾಕೆ ಬರುತ್ತೀರಾ? ನಿಮಗೇನು ಕೆಲಸ ಇಲ್ಲಿ? ಎಲ್ಲಿ ನಿಮ್ಮ ಅಧಿಕಾರಿ’ ಎಂದು ಪ್ರಶ್ನಿಸಿದರು. ‘ಅವರಿಗೆ ಆರೋಗ್ಯ ಸರಿ ಇಲ್ಲ’ ಎಂಬ ಉತ್ತರ ಕೇಳಿ ಕೆರಳಿದ ಶಾಸಕ ಆನೆ ಇದ್ದಂತೆ ಇದ್ದಾರೆ. ಅವರಿಗೆ ಆರೋಗ್ಯದಲ್ಲಿ ಏರುಪೇರಾ? ಕರೆಸಿ ಅವರನ್ನು. ಜಿಲ್ಲಾ ಶಸ್ತ್ರಚಿಕಿತ್ಸಕರು ಸಭೆಯಲ್ಲೇ ಇದ್ದಾರೆ. ಅಧಿಕಾರಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸೋಣ ಎಂದರು. ಬಳಿಕ ಸಭೆಗೆ ಗೈರಾಗಿರುವ ಅಧಿಕಾರಿಗಳಿಗೆ ನೋಟಿಸ್ ನೋಡುವಂತೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT