ರಾಮನಗರ: ‘ರಾಮನಗರದ ರಾಮದೇವರ ಬೆಟ್ಟ ಅಭಿವೃದ್ಧಿಗೆ ಫೆಬ್ರುವರಿಯಲ್ಲಿ ಮಂಡನೆಯಾಗಲಿರುವ ಬಜೆಟ್ನಲ್ಲಿ ಹಣ ಘೋಷಣೆಯಾಗಲಿದೆ. ರಾಮನ ಪಾದ ಸ್ಪರ್ಶವಾದ ಜಾಗದಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ. ಬೆಟ್ಟದ ಜಾಗ ಪ್ರವಾಸಿ ತಾಣವಾಗಿ ಅಭಿವೃದ್ಧಿಯಾಗಲಿದೆ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.
ತಾಲ್ಲೂಕಿನ ವಿಭೂತಿಕೆರೆಯ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಟ್ಟವನ್ನು ಅಭಿವೃದ್ಧಿ ಮಾಡಿ, ರಾಮನ ಆದರ್ಶಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗುವುದು. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕಿತ್ತು. ಕಡೆಗೂ ಆಗಿದೆ. ಅದನ್ನು ಸ್ವಾಗತ ಮಾಡುತ್ತೇನೆ’ ಎಂದರು.
ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಹುಸೇನ್ ಅವರು, ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ಅವುಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಂಗ್ರೆಸ್ ಮುಖಂಡರಾದ ಕೆ. ರಾಜು ವಿ.ಎಚ್. ರಾಜು, ಜಯಣ್ಣ, ಎ.ಬಿ. ಚೇತನ್ ಕುಮಾರ್, ಭದ್ರಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ, ಸದಸ್ಯರು, ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಇದ್ದರು.