ಚನ್ನಪಟ್ಟಣ: ಕೊರೊನಾ ಕಾಲದಲ್ಲಿ ಕೂಲಿ ಕಾರ್ಮಿಕರಿಗೆ ನರೇಗಾ ಕಾಮಗಾರಿ ವರದಾನವಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಎಂ.ಲೋಕೇಶ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಸೋಗಾಲ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಸ್ಮಶಾನ ಕಾಮಗಾರಿ ಮತ್ತು ಹಳ್ಳಗಳ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ಮಾಡಿ ಮಾತನಾಡಿದರು.
ಗ್ರಾಮದಲ್ಲಿ ನರೇಗಾ ಯೋಜನೆಯಡಿ ಸ್ಮಶಾನ ಅಭಿವೃದ್ಧಿಪಡಿಸಿ, ಅಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ. ಇದರಿಂದ ಮೃತರ ಅಂತಿಮ ದರ್ಶನ ಪಡೆಯಲು ಬರುವ ಜನರಿಗೆ ಅನುಕೂಲವಾಗುತ್ತಿದೆ. ಜತೆಗೆಸ್ಮಶಾನಗಳಲ್ಲಿ ಗಿಡಗಳನ್ನು ನೆಡುವುದರಿಂದ ಮುಂದಿನ ದಿನಗಳಲ್ಲಿ ನೆರಳು, ಉತ್ತಮ ಪರಿಸರ ನಿರ್ಮಾಣವಾಗಲಿದೆಎಂದರು.
ಗ್ರಾಮೀಣ ಭಾಗಗಳಲ್ಲಿ ಮುಚ್ಚಿಹೋಗಿರುವ ಹಳ್ಳಗಳನ್ನು ಅಭಿವೃದ್ಧಿ ಮಾಡುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಹಳ್ಳಗಳ ಅಭಿವೃದ್ಧಿ ಹಾಗೂ ಹಳ್ಳಗಳಲ್ಲಿ ಅಲ್ಲಲ್ಲಿ ತಡೆಗೋಡೆ ನಿರ್ಮಿಸುವುದರಿಂದ ನೀರು ನಿಂತು ಅಂತರ್ಜಲ ಹೆಚ್ಚಳವಾಗಲಿದೆ ಎಂದರು.
ಪಿಡಿಒ ಶ್ರೀನಿವಾಸಮೂರ್ತಿ, ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕ ಮಂಜುನಾಥ್, ಗ್ರಾ.ಪಂ. ಸದಸ್ಯರು ಇದ್ದರು.