ಕನಕಪುರ: ‘ಕೊರೊನಾ ಸೋಂಕು ಸೇರಿದಂತೆ ಹಲವಾರು ಸಮಸ್ಯೆಗಳಿಂದಸಂಕಷ್ಟಕ್ಕೆ ಸಿಲುಕಿರುವ ರೈತ ಸಮುದಾಯಕ್ಕೆ ರಸಗೊಬ್ಬರ ಬೆಲೆ ಏರಿಕೆ ಮಾಡುವ ಮೂಲಕ ಸರ್ಕಾರ ಮತ್ತಷ್ಟು ಸಂಕಷ್ಟ ಕೊಡುತ್ತಿದೆ’ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಚೀಲೂರು ಮುನಿರಾಜು ಆಕ್ರೋಶ ವ್ಯಕ್ತಪಡಿಸಿದರು.
ರಸಗೊಬ್ಬರ ಬೆಲೆ ಏರಿಕೆಯನ್ನು ಖಂಡಿಸಿ ಹಾಗೂ ರಸಗೊಬ್ಬರ ಸೇರಿದಂತೆ ಕೃಷಿ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ಕೊಡಬೇಕೆಂದು ಒತ್ತಾಯಿಸಿ ತಾಲ್ಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ರಾಜ್ಯ ರೈತ ಸಂಘದಿಂದ ಶುಕ್ರವಾರ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.
‘ಯೂರಿಯೇತರ ರಸಗೊಬ್ಬರಗಳ ಉತ್ಪಾದಕ ಕಂಪನಿಗಳ ಬೆಲೆ ಏರಿಕೆಯ ಮೇಲೆ ಸರ್ಕಾರದ ನಿಯಂತ್ರಣವನ್ನು ತೆಗೆದುಹಾಕಿರುವುದರಿಂದ ತಮಗಿಷ್ಟ ಬಂದ ರೀತಿಯಲ್ಲಿ ಕಂಪನಿಗಳು ಬೆಲೆ ಏರಿಕೆ ಮಾಡಿ ರೈತರನ್ನು ಶೋಷಣೆ ಮಾಡುತ್ತವೆ’ ಎಂದರು.
‘ರೈತರ ಪರವಾದ ಸರ್ಕಾರವೆಂದು ಹೇಳಿಕೊಳ್ಳುವ ರಾಜ್ಯ ಮತ್ತು ಕೇಂದ್ರ ಸರ್ಕಾರವು ರಸಗೊಬ್ಬರಗಳ ಬೆಲೆಯನ್ನು ಕಡಿಮೆ ಮಾಡಬೇಕು ಹಾಗೂ ರಸಗೊಬ್ಬರ ಉತ್ಪಾದಕ ಕಂಪನಿಗಳ ಮೇಲೆ ನಿಯಂತ್ರಣ ಮಾಡಬೇಕು’ ಎಂದು ಒತ್ತಾಯಿಸಿದರು.