ರಾಮನಗರ: ‘ಈ ಬಾರಿ ರಾಜ್ಯದಲ್ಲಿ ಬಿಜೆಪಿ ಯಾವ ಪಕ್ಷದ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ನವರು ನಂಬಿಕೆಗೆ ಅರ್ಹರಲ್ಲ ಎಂಬುದು ನಮ್ಮ ಪಕ್ಷದ ವರಿಷ್ಠರಿಗೆ ಗೊತ್ತಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ–ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ತಮ್ಮ ಹಳೆಯ ಆಡಿಯೊ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುವ ಕುರಿತು ಅವರು ಮಾಧ್ಯಮದವರಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.
‘ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆ ಮಾಡಿ, ಹಲವು ಮುಖಂಡರನ್ನು ಬೆಳೆಸಿದ್ದೆವು. ಆದರೆ ಅವರಿಗೆ ಟಿಕೆಟ್ ಸಿಗಲಿಲ್ಲ. ನಮ್ಮ ಪಕ್ಷದ ಬೆಳವಣಿಗೆಯನ್ನು ನಾವೇ ಮೊಟಕುಗೊಳಿಸಿಕೊಂಡಿದ್ದೆವು ಎಂದು ಸಾಂದರ್ಭಿಕವಾಗಿ ಆ ರೀತಿ ಮಾತನಾಡಿದ್ದೆ ಅಷ್ಟೇ’ ಎಂದು ಅವರು ಸ್ಪಷ್ಟನೆ ನೀಡಿದರು.
ಕಳೆದ ಬಾರಿ ಚುನಾವಣಾಪೂರ್ವದಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲ ಪಡೆದಿದ್ದ ಕುಮಾರಸ್ವಾಮಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ಕಾಂಗ್ರೆಸ್ ಜೊತೆ ಹೋಗಿ ಮುಖ್ಯಮಂತ್ರಿ ಆದರು. ಜೆಡಿಎಸ್ನವರು ಎರಡೂ ಪಕ್ಷದ ಜೊತೆ ‘ಬ್ಯಾಲೆನ್ಸ್’ ಮಾಡುತ್ತಾರೆ. ಇದು ಬಿಜೆಪಿ ವರಿಷ್ಠರ ಗಮನಕ್ಕೆ ಬಂದಿದೆ. ಹಾಗಾಗಿ ಈ ಬಾರಿ ಯಾವುದೇ ಹೊಂದಾಣಿಕೆ ಇಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.
ಬಿಜೆಪಿಯಿಂದಲೇ ಸ್ಪರ್ಧೆ: ಕಾಂಗ್ರೆಸ್ ಸೇರುವ ವದಂತಿಗಳ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಸಿ.ಪಿ. ಯೋಗೇಶ್ವರ್, ‘ಅದೆಲ್ಲ ಬರೀ ಸುಳ್ಳು ಸುದ್ದಿ. ಚನ್ನಪಟ್ಟಣದಲ್ಲಿ ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿ ಪ್ರಚಾರ ಮಾಡುತ್ತಿದ್ದೇನೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.