ಕನಕಪುರ: ಇಲ್ಲಿನ ರಂಗನಾಥ ಬಡಾವಣೆಯ ಹೊಂಗಿರಣ ಸಭಾಂಗಣದಲ್ಲಿ ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆ, ಜಿಲ್ಲಾ ಲೇಖಕರ ವೇದಿಕೆ ಮತ್ತು ಮಾತೃಶ್ರೀ ನಮನ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಭಾನುವಾರ ತಾಲ್ಲೂಕು ಮಟ್ಟದ ಕವಿಗೋಷ್ಠಿ ನಡೆಯಿತು.
ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಕಾರ್ಯಕ್ರಮ ಕುರಿತು ಮಾತನಾಡಿದರು.
ಇಂದಿನ ಯುವ ಪೀಳಿಗೆಯ ಯುವಕರಲ್ಲಿ ನೆಲ, ಜಲ, ಭಾಷೆಯ ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಬೇಕು, ನಮ್ಮ ನಾಡಿನ ಕವಿಗಳ ಬಗ್ಗೆ ಪರಿಚಯ ಮಾಡಿಕೊಡುವ ಕೆಲಸ ಮಾಡಬೇಕೆಂದು ತಿಳಿಸಿದರು.
ಮಾತೃಶ್ರೀ ನಮನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರು ಮಾತನಾಡಿ ಯುವಕರಲ್ಲಿ ಸಾಹಿತ್ಯ ಅಭಿರುಚಿ ಬೆಳೆಸುವ ಉದ್ದೇಶದಿಂದ ಇಂದು ತಾಲ್ಲೂಕು ಮಟ್ಟದ ಕವಿಗೋಷ್ಠಿಯನ್ನು ನಡೆಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದರು.
ಚನ್ನಪಟ್ಟಣದ ಕಸಾಪ ಮಾಜಿ ಅಧ್ಯಕ್ಷ ಮತ್ತಿಕೆರೆ ಚೆಲುವರಾಜು ಮಾತನಾಡಿದರು. ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು, ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂಗಿ ಗಿರಿಯಪ್ಪ, ಸ್ವಾಕರವೇ ಜಿಲ್ಲಾಧ್ಯಕ್ಷ ಭಾಸ್ಕರ್, ಕಾರ್ಮಿಕ ಘಟಕದ ಅಧ್ಯಕ್ಷ ಅಸ್ಗರ್ಖಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ತಾಲ್ಲೂಕು ಮಟ್ಟದ ಕವಿಗೋಷ್ಠಿಯಲ್ಲಿ 15 ಕವಿಗಳು ಪಾಲ್ಗೊಂಡಿದ್ದರು. ಗಟ್ಟಿಗುಂದ ಮಹಾದೇವ ಮೊದಲನೇ ಬಹುಮಾನ, ಮೇದರ ದೊಡ್ಡಿ ಹನುಮಂತ ಎರಡನೇ ಬಹುಮಾನ, ಹುಣಸನಹಳ್ಳಿ ನಾಗೇಂದ್ರ ಮೂರನೇ ಬಹುಮಾನಕ್ಕೆ ಭಾಜರಾದರು.