ಕನಕಪುರ: ಹದಿನಾಲ್ಕು ತಿಂಗಳ ಬಾಕಿ ವೇತನಕ್ಕೆ ಆಗ್ರಹಿಸಿ ಪೌರ ಕಾರ್ಮಿಕರಿಬ್ಬರು ಮೈ ಮೇಲೆ ಮಲ ಸುರಿದುಕೊಂಡು ಪ್ರತಿಭಟಿಸಿದ್ದಾರೆ. ತಾಲ್ಲೂಕಿನ ಕಸಬಾ ಹೋಬಳಿಯ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು, ಇದಾದ ಒಂದೇ ತಾಸಿನಲ್ಲಿ ಇಬ್ಬರ ವೇತನವನ್ನು ಪಾವತಿಸಲಾಗಿದೆ.
ಪಂಚಾಯಿತಿಯಲ್ಲಿ ಸ್ವಚ್ಛಗಾರರಾಗಿ ಕೆಲಸ ಮಾಡುತ್ತಿದ್ದ ಎನ್. ಸುರೇಶ್ ಮತ್ತು ವಿ. ರಂಗಯ್ಯ ಪ್ರತಿಭಟನೆ ನಡೆಸಿದ ಪೌರ ಕಾರ್ಮಿಕರು. 2020ರಿಂದ ಕೆಲಸ ಮಾಡುತ್ತಿದ್ದ ಇಬ್ಬರಿಗೂ ಒಂದೂವರೆ ವರ್ಷದ ಹಿಂದಿನ ತಲಾ ₹1.60 ಲಕ್ಷ ವೇತನ ಬಾಕಿ ಇತ್ತು.
ವೇತನಕ್ಕಾಗಿ ಪಂಚಾಯಿತಿ ಅಧಿಕಾರಿಗಳನ್ನು ಕೇಳಿ ಬೇಸತ್ತ ಕಾರ್ಮಿಕರು, ಮಧ್ಯಾಹ್ನ ಬಿಂದಿಗೆಯಲ್ಲಿ ಮಲ ತೆಗೆದುಕೊಂಡು ಬಂದು ಪಂಚಾಯಿತಿ ಎದುರು ಮೈ ಮೇಲೆ ಸುರಿದುಕೊಂಡಿದ್ದಾರೆ. ಬಳಿಕ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷರು ಇಬ್ಬರ ವೇತನವನ್ನು ಲೆಕ್ಕಾಚಾರ ಮಾಡಿ, ಚೆಕ್ ಮತ್ತು ನಗದು ಮೂಲಕ ಪಾವತಿಸಿದ್ದಾರೆ.
‘ಬಾಕಿ ವೇತನ ಕುರಿತು ನನಗೂ ತಿಳಿಸದ ಪೌರ ಕಾರ್ಮಿಕರು, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಕಾರ್ಯಕರ್ತರೊಂದಿಗೆ ಪಂಚಾಯಿತಿಗೆ ಬಂದು ಮಲ ಸುರಿದುಕೊಂಡು ಪ್ರತಿಭಟಿಸಿದ್ದಾರೆ. ನಂತರ, ಇಬ್ಬರಿಗೆ ತಲಾ ₹1,10,400 ಮೊತ್ತದ ಚೆಕ್ ಮತ್ತು ₹50 ಸಾವಿರ ಕೊಟ್ಟು ಬಾಕಿ ಸಂಬಳ ಪಾವತಿಸಿದ್ದೇವೆ’ ಎಂದು ಕಲ್ಲಹಳ್ಲಿ ಪಿಡಿಒ ಶ್ರೀನಿವಾಸ್ ‘ಪ್ರಜಾವಾಣಿ’ಗೆ ತಿಳಿಸಿದರು.