ಚನ್ನಪಟ್ಟಣ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಗ್ರಾಮದಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ ಖಂಡಿಸಿ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕ ಹಾಗೂ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಪಟ್ಟಣದ ಅಂಬೇಡ್ಕರ್ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಇದು ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಯುವಕ ಮಾಡಿರುವ ತಪ್ಪು ಸತ್ಯವಾಗಿದ್ದರೆ ಆತನನ್ನು ಶಿಕ್ಷಿಸಲು ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿವೆ. ಆದರೆ, ಮೂತ್ರ ಕುಡಿಸುವ ಮೂಲಕ ಅನಾಗರಿಕ ಶಿಕ್ಷೆ ನೀಡಿರುವುದು ಅಕ್ಷಮ್ಯ ಅಪರಾಧ. ಈ ಅಪರಾಧ ಎಸಗಿರುವ ಸಬ್ ಇನ್ಸ್ಪೆಕ್ಟರ್ ಅನ್ನು ಕಾಯಂ ಆಗಿ ಸೇವೆಯಿಂದ ವಜಾ ಮಾಡಬೇಕು. ಆತ ಕಾನೂನು ರಕ್ಷಕನಾಗಿರಲು ಯೋಗ್ಯತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತಪರ ಹೋರಾಟಗಾರ ಪಟ್ಲು ಗೋವಿಂದರಾಜು ಮಾತನಾಡಿ, ಸಂವಿಧಾನದ ಆಶಯಗಳಿಗೆ ಗೌರವ ನೀಡದ ಅಲ್ಲಿನ ಸಬ್ ಇನ್ಸ್ಪೆಕ್ಟರ್ ನಡವಳಿಕೆ ಖಂಡನೀಯ ಎಂದು ಹೇಳಿದರು.