ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ತಾಲ್ಲೂಕು ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ಸೋಮವಾರ ನಗರದಲ್ಲಿ ಗಾಂಧಿಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿರುವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡಿರುವುದು ನಾಚಿಕೆಗೇಡಿನ ಸಂಗತಿ. ಈ ಕೂಡಲೇ ಅವರು ರಾಜ್ಯದ ಮಹಿಳೆಯರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಹೆಣ್ಣುಮಕ್ಕಳಿಗೆ ವರದಾನವಾಗಿದೆ. ಸರ್ಕಾರದ ಯೋಜನೆಗಳಿಂದ ಇಂದು ಮಹಿಳೆಯರು ಸಂತೋಷದ ಜೀವನ ನಡೆಸುವಂತಾಗಿದೆ. ಎಚ್.ಡಿ. ಕುಮಾರಸ್ವಾಮಿ ಅವರು ಜವಾಬ್ದಾರಿಯುತ ಸ್ಥಾನದಲ್ಲಿಟ್ಟುಕೊಂಡು ಈ ರೀತಿಯ ಹೇಳಿಕೆ ನೀಡುವುದು ಅವರ ಸ್ಥಾನಕ್ಕೆ ಶೋಭೆ ತರುವಂಥದ್ದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಕೆ.ಟಿ. ಲಕ್ಷ್ಮಮ್ಮ, ತಾಲ್ಲೂಕು ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಕೋಕಿಲಾರಾಣಿ, ಪಕ್ಷದ ಮಹಿಳಾ ಪದಾಧಿಕಾರಿಗಳಾದ ಗೌರಮ್ಮ, ಶಾಂತಮ್ಮ, ಅನಿತಾ, ಸುಮಿತ್ರ ಗಂಗಾಧರ್, ಇತರರು ಭಾಗವಹಿಸಿದ್ದರು