ರಾಮನಗರ: ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ಕಾಯ್ದೆಯ ಕಲಂ 79 ಎಬಿಸಿ ಮತ್ತು 80 ಅನ್ನು ತೆಗೆದು ಹಾಕಲು ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಮಾವೇಶಗೊಂಡ ರೈತ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಿದ್ದುಪಡಿಯಿಂದಾಗಿ ರಾಜ್ಯದಲ್ಲಿರುವ ಸಣ್ಣ ಹಿಡುವಳಿ ರೈತರ ಸಂಪೂರ್ಣ ಬದುಕು ಬೀದಿಗೆ ಬೀಳಲಿದೆ. ಇವರು ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲಿದೆ. ರೈತಾಪಿ ಸಂಸ್ಕತಿ ಸಂಪೂರ್ಣ ಮಾಯವಾಗಿ ಬಂಡವಾಳಿಗರ ಕೃಷಿ ಸಂಸ್ಕತಿ ಬೆಳೆಯಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಆಹಾರ ಭದ್ರತೆಯ ಹಕ್ಕು ನಾಶವಾಗಲಿದೆ. ಆಹಾರಕ್ಕಾಗಿ ಭಿಕ್ಷೆ ಬೇಡುವ ಸ್ಥಿತಿ ನಿಮಾಣವಾಗುತ್ತದೆ. ಗ್ರಾಹಕರ ಮೇಲೂ ಹೊಡೆತ ಬೀಳುತ್ತದೆ. ಬಂಡವಾಳ ಶಾಹಿಗಳು ಕುಲಾಂತರಿ ಬೀಜಗಳ ಬಳಕೆ, ರಾಸಾಯನಿಕ ಕೃಷಿಗೆ ಒತ್ತು ನೀಡಿ ಇಡೀ ಪರಿಸರವೇ ನಾಶವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ರೈತ ಹೋರಾಟದಿಂದ ಬಂದವರಾಗಿದ್ದಾರೆ. ರೈತರ ಹಿತಾಸಕ್ತಿ ಕಾಯುವುದಾಗಿ ಹೇಳುತ್ತಲೇ, ಈ ತಿದ್ದುಪಡಿ ಮಸೂದೆ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗೆ ಅವಕಾಶವನ್ನು ನೀಡದೇ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದ್ದಾರೆ ಎಂದು ಹೇಳಿದರು.
ಈ ವೇಳೆ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸಿಂ.ಲಿಂ.ನಾಗರಾಜು, ಸಂಘಟನೆಯ ಪದಾಧಿಕಾರಿಗಳಾದ ಎಂ.ರಾಮು, ಚೀಲೂರು ಮುನಿರಾಜು, ಕೃಷ್ಣಯ್ಯ, ರವಿ ಮತ್ತಿತರರು ಇದ್ದರು.