ರಾಮನಗರ: "ಸರ್ಕಾರಗಳ ರೈತವಿರೋಧಿ ಕಾಯ್ದೆ ಹಾಗೂ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ಇದೇ 28ರಂದು ಕರೆ ನೀಡಿರುವ ಕರ್ನಾಟಕ ಬಂದ್ ಅನ್ನು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲಿಸಲಿದೆ’ ಎಂದು ಸಂಘದ ಅಧ್ಯಕ್ಷ ತುಂಬೇನಹಳ್ಳಿ ಶಿವಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೃಷಿ ಸಮುದಾಯ ಹಾಗೂ ಕೃಷಿ ಅವಲಂಬಿತ ಕುಟುಂಬಗಳು ಹಾಗೂ ಕಾರ್ಮಿಕರಿಗೆ ಕಂಟಕವಾಗಿರುವ ಎಪಿಎಂಸಿ, ಭೂ ಸುಧಾರಣೆ ಮತ್ತು ಕಾರ್ಮಿಕ ತಿದ್ದುಪಡಿ ಮಸೂದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರಲು ಹೊರಟಿರುವುದು ಸರಿಯಲ್ಲ. ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿದ್ದು, ಇದನ್ನು ಎಲ್ಲರೂ ವಿರೋಧಿಸಬೇಕಿದೆ ಎಂದರು. ಬಂದ್ ಅನ್ನು 20ಕ್ಕೂ ಹೆಚ್ಚು ಪ್ರಗತಿಪರ ಸಂಘಟನೆಗಳು ಬೆಂಬಲಿಸಿವೆ. ರೈತ ಸಂಘದಿಂದ ಅಂದು ರಾಮನಗರದ ಐಜೂರು ವೃತ್ತದಲ್ಲಿ ಶಾಂತಿಯುತ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.
ಸಂಘದ ಗೌರವ ಅಧ್ಯಕ್ಷ ಶಾನುಭೋಗನಹಳ್ಳಿ ದೇವರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಮೆಳೇಹಳ್ಳಿ ಶಿವಕುಮಾರ್, ಬಿಡದಿ ಹೋಬಳಿ ಘಟಕದ ಅಧ್ಯಕ್ಷ ಜಯರಾಮ್, ಉಪಾಧ್ಯಕ್ಷ ರಂಗಸ್ವಾಮಿ, ಮಹಿಳಾ ಘಟಕದ ಚಿಕ್ಕಮ್ಮಣಿ, ಪದಾಧಿಕಾರಿಗಳಾದ ನರಸಿಂಹಮೂರ್ತಿ, ನಾರಾಯಣ, ತಿಮ್ಮಯ್ಯ, ಚಿಕ್ಕರಾಮಣ್ಣ, ಚಿಕ್ಕಣ್ಣ ಇದ್ದರು.