ಮಾಗಡಿ: ತಾಲ್ಲೂಕಿನ ಅದರಂಗಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಶಾಸಕ ಎಚ್.ಸಿ.ಬಾಲಕೃಷ್ಣ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮದ ಸರ್ವೆ ನಂ. 100ರಲ್ಲಿನ ಸರ್ಕಾರಿ ಗೋಮಾಳದಲ್ಲಿ 3 ಎಕರೆ ವಿಸ್ತೀರ್ಣದಲ್ಲಿ ನೂತನ ಬಡಾವಣೆ ನಿರ್ಮಿಸಿ ವಸತಿರಹಿತರಿಗೆ ನಿವೇಶನ ವಿತರಿಸಲಾಗುವುದು. ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ₹5 ಲಕ್ಷ ಅನುದಾನ ನೀಡುತ್ತೇನೆ ಎಂದರು.
ಅದರಂಗಿ, ಅಜ್ಜೇನಹಳ್ಳಿ, ಕಾಡಿಮಡು ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಕಲ್ಲುಕ್ವಾರಿ ನಡೆಯುವುದನ್ನು ತಡೆಗಟ್ಟಬೇಕು. ಚಿರತೆ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಗ್ರಾಮಸ್ಥರು ಶಾಸಕರು ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ಸೆ.26ರಂದು ಕುದೂರು ಪಂಚಾಯಿತಿ ಕೇಂದ್ರದಲ್ಲಿ ನಡೆಯಲಿರುವ ಜನಸಂಪರ್ಕ ಸಬೆಗೆ ನೆಲಮಂಗಲ ವಲಯ ಅರಣ್ಯ ಅಧಿಕಾರಿ ಕರೆಸಿ ಸಮಸ್ಯೆ ಬಗೆಹರಿಸುತ್ತೇನೆ’ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂಜಮ್ಮ, ಕಾಂಗ್ರೆಸ್ ಮುಖಂಡರಾದ ಗೊಲ್ಲರಹಟ್ಟಿ ನಾಗರಾಜು, ಮಂಜೇಶ್ಕುಮಾರ್ , ತಾ.ಪಂ. ಇಒ ಚಂದ್ರ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.