ರಾಮನಗರ: ನಗರದ ಮಾಗಡಿ ರಸ್ತೆಯಲ್ಲಿರುವ ಶರತ್ ಮೆಮೋರಿಯಲ್ ಇಂಗ್ಲಿಷ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ದಿವ್ಯಶ್ರೀ ಆರ್. ಅವರು ‘ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ: 2023–24’ ಸ್ಪರ್ಧೆಗೆ ಭರತನಾಟ್ಯ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.
ಕ್ಲಸ್ಟರ್, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ದಿವ್ಯಶ್ರೀ, ಧಾರವಾಡದ ವಿದ್ಯಾಗಿರಿಯಲ್ಲಿ ಶಾಲಾ ಶಿಕ್ಷಣ ಇಲಾಖೆಯು ಫೆ. 8 ಮತ್ತು 9ರಂದು ಹಮ್ಮಿಕೊಂಡಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.
ಇಲ್ಲಿನ ಹನುಮಂತನಗರದ ಎನ್. ಯಶಸ್ವಿನಿ ಮತ್ತು ರಾಜು ಎಸ್.ಪಿ ದಂಪತಿ ಪುತ್ರಿಯಾದ ದಿವ್ಯಶ್ರೀ, ವಿದುಷಿ ಡಿ. ನಾಗವೇಣಿ ಅವರ ಬಳಿ ಭರತನಾಟ್ಯ ಮತ್ತು ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಭರತನಾಟ್ಯದ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.