ಚಿಕ್ಕನಾಯಕನಹಳ್ಳಿ: ಕ್ಷೇತ್ರದಲ್ಲಿ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿ ಕಲಿಕೆಗೆ ಪೂರಕ ಶೈಕ್ಷಣಿಕ ವಾತಾವರಣ ನಿರ್ಮಿಸಲು ದೊಡ್ಡ ಮೊತ್ತದ ಅನುದಾನ ಒದಗಿಸಲಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಹೇಳಿದರು.
ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಾಳಾಗಿರುವ ಶಾಲಾ ಕಟ್ಟಡಗಳ ದುರಸ್ತಿ ಸೇರಿದಂತೆ ಎಲ್ಲ ಪೂರಕ ಪ್ರಕ್ರಿಯೆಗಳು ಟೆಂಡರ್ ಹಂತದಲ್ಲಿದೆ. ಸರ್ಕಾರ ಶಿಕ್ಷಣಕ್ಕೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಿದೆ. ಪೋಷಕರು ಕೂಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಿದ್ದಾರೆ ಎಂದರು.
ವಯಸ್ಸಿಗೆ ಮೀರಿದ ಬುದ್ಧಿಶಕ್ತಿ ಇಂದಿನ ಮಕ್ಕಳಲ್ಲಿದೆ. ಅವರ ಆಲೋಚನೆಗಳಿಗೆ ತಣ್ಣೀರು ಎರಚುವ ಕೆಲಸ ಮಾಡಬಾರದು. ಅವರಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಸಾಧನೆ ಮಾಡಲು ಪಾಲಕರು ಹಾಗೂ ಶಿಕ್ಷಕರು ಸ್ಫೂರ್ತಿ ತುಂಬಬೇಕು ಎಂದು ಸಲಹೆ ನೀಡಿದರು.
ಸಮಾರಂಭ ಉದ್ಘಾಟಿಸಿದ ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎಂ.ಸುರೇಶ್ ಮಾತನಾಡಿ, ಪ್ರತಿಭಾ ಕಾರಂಜಿ, ಶಾಲಾ ಕ್ರೀಡಾಕೂಟಗಳಿಗೆ ಸರ್ಕಾರ ನೀಡುತ್ತಿರುವ ₹20 ಸಾವಿರ ಸಾಕಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಡಯಟ್ ಉಪನ್ಯಾಸಕ ರಂಗರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗವಿರಂಗಯ್ಯ, ಜಗದೀಶ್, ಪಲ್ಲಕ್ಕಿ ಬಸವರಾಜ್ ಮಾತನಾಡಿದರು. ಬಿಇಒ ಕಾಂತರಾಜು, ಕ್ಷೇತ್ರ ಸಮನ್ವಯಾಧಿಕಾರಿ ನರಸಿಂಹಯ್ಯ, ಶಿವಕುಮಾರ್, ಎಚ್.ಸುರೇಶ್, ದಯಾಶಂಕರ್, ಗಂಗಾಧರಸ್ವಾಮಿ, ರಂಗದಾಮಯ್ಯ, ಲಕ್ಷ್ಮೀಶ್ ಇತರರು ಇದ್ದರು.