ಪಹಣಿ ತಿದ್ದುಪಡಿಗೆ ಸಂಬಂಧಿಸಿದಂತೆ ಚನ್ನಪಟ್ಟಣ ತಾಲ್ಲೂಕು ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಎಸ್.ಜಿ.ಶಿವಲಿಂಗಯ್ಯ ಅವರ ಮೇಲೆ ಔಷಧಿ ಅಂಗಡಿಯ ಮಾಲೀಕರೊಬ್ಬರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಇದೇ 6ರಂದು ಪ್ರಕರಣ ದಾಖಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರಿ ಕಂದಾಯ ನೌಕರರ ಸಂಘದ ಗಮನಕ್ಕೂ ತರಲಾಗಿದೆ. ಅವರ ಮಾರ್ಗದರ್ಶನದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೂ ಇದೇ 12ರಂದು ದೂರು ಸಲ್ಲಿಸಲಾಗಿದೆ. ಆದರೂ ಆರೋಪಿಯನ್ನು ಈತನಕ ಬಂಧಿಸಿಲ್ಲ. ಇದು ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತದೆ ಎಂದು ಗ್ರಾಮ ಲೆಕ್ಕಿಗರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಂದಾನೇಗೌಡ ಆರೋಪಿಸಿದರು.