ರಾಮನಗರ: ಎಸ್ಎಸ್ಎಲ್ಸಿ ಪರೀಕ್ಷೆಗಳು ಇದೇ 21ರಿಂದ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿವೆ.
ಸಾರ್ವಜನಿಕ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಒಟ್ಟು 56 ಪರೀಕ್ಷಾ ಕೇಂದ್ರಗಳು ಕಾರ್ಯ ನಿರ್ವಹಿಸಲಿವೆ. 331 ಖಾಸಗಿ ಅಭ್ಯರ್ಥಿಗಳೂ ಪರೀಕ್ಷೆ ಬರೆಯಲಿದ್ದು, ಅವರಿಗಾಗಿ ಎರಡು ಕೇಂದ್ರಗಳನ್ನು ಮೀಸಲಿಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿದೆ. ಕಾರಿಡಾರ್, ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಇಡುವ ಕೊಠಡಿಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಚಟುವಟಿಕೆಗಳ ಮೇಲೆ ನಿಗಾ ಇಡಲು ಜಾಗೃತ ದಳವನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಾರ್ವಜನಿಕ ಶಿಕ್ಷಣ ಉಪ ನಿರ್ದೇಶಕರ ನೇತೃತ್ವದಲ್ಲಿ ಜಾಗೃತ ದಳ ನೇಮಕ ಮಾಡಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ, ತಹಶೀಲ್ದಾರ್, ತಾ.ಪಂ. ಇಒ ನೇತೃತ್ವದ ದಳಗಳು ಕಾರ್ಯ ನಿರ್ವಹಿಸಲಿವೆ.
ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಸುತ್ತಲಿನ ಜೆರಾಕ್ಸ್ ಅಂಗಡಿಗಳು ಬಂದ್ ಆಗಲಿವೆ. ಪ್ರತಿ ಕೇಂದ್ರಕ್ಕೂ ಪೊಲೀಸರ ಕಣ್ಗಾವಲು ಇರಲಿದೆ. ಜೊತೆಗೆ ಆರೋಗ್ಯ ಶುಶ್ರೂಷಕಿಯರನ್ನೂ ನಿಯೋಜಿಸಲಾಗಿದೆ.