ಚನ್ನಪಟ್ಟಣ: ಲೋಕಸಭಾ ಚುನಾವಣೆ ಪಾರದರ್ಶಕವಾಗಿ ನಡೆಸಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದೆ ಎಂದು ಸಹಾಯಕ ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ತಿಳಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ100 ರಷ್ಟು ಮತದಾನವಾಗುವಂತೆ ಮಾಡಲು ಮತದಾರರಲ್ಲಿ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
18ವರ್ಷ ತುಂಬಿರುವ ಪ್ರತಿಯೊಬ್ಬರೂ ಮತ ಹಾಕುವುದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವರ ಹಕ್ಕು ಆಗಿದೆ. ಮತದಾನದ ಸಂದರ್ಭದಲ್ಲಿ ಮತದಾನದಿಂದ ದೂರವಿರುವುದು ಸಂವಿಧಾನಕ್ಕೆ ಮಾಡುವ ಅಪಚಾರವಾಗಿದೆ. ಯಾವುದೇ ತುರ್ತು ಸಂದರ್ಭವಿದ್ದರೂ ಸಮಯಾವಕಾಶ ಮಾಡಿಕೊಂಡು ಮತದಾನ ಮಾಡಬೇಕು ಎಂದರು.
ತಾಲ್ಲೂಕಿನ ಹೊಂಗನೂರು ಗ್ರಾಮದ ಮತಗಟ್ಟೆ ಸಂಖ್ಯೆ 183 ಮಾದರಿ ಮತಕೇಂದ್ರವನ್ನಾಗಿ ಮಾಡಲಾಗಿದೆ. ನಗರದ ಮತಗಟ್ಟೆ ಸಂಖ್ಯೆ 79, 92, 99, 108 ಕೇಂದ್ರಗಳನ್ನು ಪಿಂಕ್ ಮತ ಕೇಂದ್ರಗಳಾಗಿ ಗುರುತಿಸಲಾಗಿದೆ ಎಂದರು.
ತಹಶೀಲ್ದಾರ್ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಇಒ ರಾಮಕೃಷ್ಣ, ಸರ್ಕಲ್ ಇನ್ಸ್ಪೆಕ್ಟರ್ ಸತೀಶ್, ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್, ಎಂ.ಕೆ.ದೊಡ್ಡಿ ಠಾಣೆ ಸಬ್ ಇನ್ಸ್ಪೆಕ್ಟರ್ ವಸಂತ್ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.